ಜಿಲ್ಲೆಯಾದ್ಯಂತ ಶಿವನ ಸ್ಮರಣೆಯಲ್ಲಿ ಮಿಂದೆದ್ದ ಭಕ್ತಗಣ

KannadaprabhaNewsNetwork |  
Published : Feb 16, 2026, 01:15 AM IST
ದದದ | Kannada Prabha

ಸಾರಾಂಶ

ಕ್ಯಾತ್ಸಂದ್ರದ ಹರಿಹರ ಕ್ಷೇತ್ರವೆಂದೇ ಪ್ರಸಿದ್ಧವಾದ ಶ್ರೀ ಚಂದ್ರಮೌಳೀಶ್ವರಸ್ವಾಮಿ ದೇವಾಲಯದಲ್ಲಿ ನಾಲ್ಕು ಯಾಮದ ಪೂಜೆ, ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ತಾಲೂಕಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿರುವ ಶ್ರೀ ವಿದ್ಯಾಶಂಕರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾದಿ ಹವನಗಳು ನೆರವೇರಿದವು. ಬೆಳಗ್ಗೆ 6.30ರಿಂದಲೇ ವಿಶೇಷ ಪೂಜೆಗಳು ನೆರವೇರಿದವು.

ಕನ್ನಡಪ್ರಭ ವಾರ್ತೆ ತುಮಕೂರು

ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಜಿಲ್ಲೆಯಾದ್ಯಂತ ಶಿವನ ದೇವಾಲಯಗಳು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಅಭಿಷೇಕ, ವಿವಿಧ ಧಾರ್ಮಿಕ ಪೂಜೆಗಳೊಂದಿಗೆ ಶಿವನಾಮ ಸ್ಮರಣೆ ಮೊಳಗಿದವು. ಮುಂಜಾನೆಯಿಂದಲೇ ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ಹಬ್ಬದ ವಿಶೇಷವಾಗಿ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿದವು.

ನಗರದ ಬಿ.ಎಚ್. ರಸ್ತೆಯ ಭದ್ರಮ್ಮ ವೃತ್ತದಲ್ಲಿರುವ ಸೋಮೇಶ್ವರಸ್ವಾಮಿ ದೇವಾಲಯ, ಸಿದ್ಧರಾಮೇಶ್ವರ ಬಡಾವಣೆಯಲ್ಲಿರುವ ಶ್ರೀ ಶಿವ- ಸುಬ್ರಹ್ಮಣ್ಯ- ಗಣಪತಿ ದೇವಾಲಯ, ಹೊರಪೇಟೆಯಲ್ಲಿರುವ ನೀಲಕಂಠೇಶ್ವರ ಸ್ವಾಮಿ ದೇವಾಲಯ, ಕುಣಿಗಲ್ ರಸ್ತೆಯಲ್ಲಿರುವ ಮಾರುತಿ, ಬನಶಂಕರಿ ಮತ್ತು ಬಸವಣ್ಣ ದೇವಾಲಯ, ಅಮರಜ್ಯೋತಿನಗರದ ಸಾಯಿಬಾಬ ದೇವಾಲಯದ ಆವರಣದಲ್ಲಿರುವ ಶಿವಲಿಂಗ, ಟಿಜಿಎಂಸಿ ಬ್ಯಾಂಕ್ ಆವರಣದ ಲಕ್ಷ್ಮೀ ದೇವಾಲಯ, ಹೊರಪೇಟೆಯ ಕಾಶಿ ವಿಶ್ವನಾಥ ದೇವಾಲಯ, ಸಿದ್ಧರಾಮೇಶ್ವರ ಬಡಾವಣೆಯ ಈಶ್ವರ ದೇವಾಲಯ, ಸರಸ್ವತಿಪುರಂ ಶಿವನ ದೇವಾಲಯ ಸೇರಿ ವಿವಿಧ ದೇವಾಲಯಗಳಿಗೆ ಮಹಾಶಿವರಾತ್ರಿಯಂದು ನಸುಕಿನಿಂದಲೇ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಭಕ್ತರು ಕುಟುಂಬ ಸಮೇತರಾಗಿ ತೆರಳಿ ಶಿವನ ದರ್ಶನ ಪಡೆದು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ನಗರದ ಹೊರಪೇಟೆಯ ನೀಲಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಮುಂಜಾನೆಯಿಂದ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿವಿಧ ಪೂಜಾಕಾರ್ಯ ನೆರವೇರಿದವು. ಬಿ.ಎಚ್. ರಸ್ತೆಯ ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿ ಭಕ್ತರಿಗಾಗಿ ವಿಶೇಷವಾಗಿ ಶಿವನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭದ್ರಮ್ಮ ವೃತ್ತದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಭಕ್ತರ ದಂಡು ಕಂಡು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ಸರದಿಯ ಸಾಲಿನಲ್ಲಿ ನಿಂತು ಶ್ರೀಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.

ಅಮರಜ್ಯೋತಿನಗರ ಸಾಯಿಬಾಬ ದೇವಾಲಯದ ಆವರಣದಲ್ಲಿರುವ ಶಿವಲಿಂಗಕ್ಕೆ ಭಕ್ತಾದಿಗಳು ಮುಂಜಾನೆಯಿಂದಲೇ ಹಾಲಿನ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

ಕ್ಯಾತ್ಸಂದ್ರದ ಹರಿಹರ ಕ್ಷೇತ್ರವೆಂದೇ ಪ್ರಸಿದ್ಧವಾದ ಶ್ರೀ ಚಂದ್ರಮೌಳೀಶ್ವರಸ್ವಾಮಿ ದೇವಾಲಯದಲ್ಲಿ ನಾಲ್ಕು ಯಾಮದ ಪೂಜೆ, ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ತಾಲೂಕಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿರುವ ಶ್ರೀ ವಿದ್ಯಾಶಂಕರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾದಿ ಹವನಗಳು ನೆರವೇರಿದವು. ಬೆಳಗ್ಗೆ 6.30ರಿಂದಲೇ ವಿಶೇಷ ಪೂಜೆಗಳು ನೆರವೇರಿದವು.

ಶ್ರೀರಾಮನಗರದ ಅಮಾನಿಕೆರೆ ಸಮೀಪವಿರುವ ಅಖಿಲ ಉಪ್ಪಾರ ಸಂಘದ ವಿದ್ಯಾಭಿವೃದ್ಧಿ ಕಟ್ಟಡದ ಮೇಲ್ಭಾಗದಲ್ಲಿರುವ ಶಿವಲಿಂಗ ಮೂರ್ತಿಗೆ ಹಾಗೂ ಕುಣಿಗಲ್ ರಸ್ತೆಯಲ್ಲಿರುವ ಮಾರುತಿ, ಬನಶಂಕರಿಯ ಮತ್ತು ಬಸವಣ್ಣ ದೇವಾಲಯದ ಮೇಲ್ಭಾಗದಲ್ಲಿರುವ ಶಿವನ ಬೃಹತ್ ಮೂರ್ತಿಗೆ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಈ ಎರಡು ಶಿವನಮೂರ್ತಿಗಳಿಗೆ ಪೂಜೆ ಸಲ್ಲಿಸಿ ಕಣ್ತುಂಬಿಕೊಂಡರು.

ಮುಂಜಾನೆಯಿಂದಲೇ ನಗರದ ಎಲ್ಲ ದೇವಾಲಯಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಂದ ಶಿವನಾಮ ಸ್ಮರಣೆ, ಭಜನೆಗಳು ಮೊಳಗಿದವು. ರಾತ್ರಿ ಶಿವನ ದೇವಾಲಯಗಳಲ್ಲಿ ಭಜನೆ, ಹರಿಕಥೆ, ದೇವರನಾಮಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಹಾರ ಸುರಕ್ಷತೆಯಲ್ಲಿ ಅಸಡ್ಡೆ ಬೇಡ; ಡಾ.ತಿಪ್ಪೇಸ್ವಾಮಿ ಕೆ.ಟಿ.
ಶಿವಯೋಗದಲ್ಲಿ ಮಾನವ ಮಹದೇವನಾಗುವ ತತ್ವ ಅಡಕ