ಭಕ್ತಿ ಬೀದಿಯ ಸರಕಾಗದಿರಲಿ: ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಕಾ.ತ. ಚಿಕ್ಕಣ್ಣ

KannadaprabhaNewsNetwork |  
Published : Apr 23, 2025, 12:40 AM IST
22ಎಚ್‌ವಿಆರ್1 | Kannada Prabha

ಸಾರಾಂಶ

ಭಕ್ತಿ ಪರಂಪರೆಯು ಶಾಸ್ತ್ರಕಾವ್ಯ ಮೀಮಾಂಸೆಯ ಹಿನ್ನೆಲೆಯಲ್ಲಿ ನೋಡುವ ಬದಲು ಜನ ಮೀಮಾಂಸೆಯ ಹಿನ್ನೆಲೆಯಲ್ಲಿ ಅವಲೋಕಿಸಬೇಕಾಗಿದೆ.

ಹಾವೇರಿ: ಭಕ್ತಿಯು ಆತ್ಮಸಂತೋಷ, ಆತ್ಮವಿಕಾಸಕ್ಕೆ ದಾರಿಯಾಗಬೇಕೇ ವಿನಾ ಬೀದಿಯ ಸರಕಾಗಬಾರದು ಎಂದು ಸಂತಕವಿ ಕನಕದಾಸ ಅಧ್ಯಯನ ಕೇಂದ್ರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ಅಭಿಪ್ರಾಯಪಟ್ಟರು.ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯ, ಸಂತಕವಿ ಕನಕದಾಸ ಅಧ್ಯಯನ ಕೇಂದ್ರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಭಕ್ತಿ ಪರಂಪರೆ ಮತ್ತು ಕರ್ನಾಟಕ ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಭಕ್ತಿ ಪರಂಪರೆಯು ಶಾಸ್ತ್ರಕಾವ್ಯ ಮೀಮಾಂಸೆಯ ಹಿನ್ನೆಲೆಯಲ್ಲಿ ನೋಡುವ ಬದಲು ಜನ ಮೀಮಾಂಸೆಯ ಹಿನ್ನೆಲೆಯಲ್ಲಿ ಅವಲೋಕಿಸಬೇಕಾಗಿದೆ. ಸಮಾಜದಲ್ಲಿನ ತಾರತಮ್ಯ, ಶ್ರೇಷ್ಠ- ಕನಿಷ್ಠ, ಮೇಲು- ಕೀಳು, ಯುದ್ಧದಂತಹ ಸಂದಿಗ್ಧ ಸ್ಥಿತಿಯಲ್ಲಿ ಭಾರತೀಯ ಭಕ್ತಿಪಂಥವು ಎದುರುಗೊಂಡಿತ್ತು ಎಂದರು.

ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಮಾತನಾಡಿ, ಭಾರತದ ಸಾಂಸ್ಕೃತಿಕ ಇತಿಹಾಸದಲ್ಲಿ ದೇವರು, ಭೂತ, ಆತ್ಮದ ಕುರಿತಾಗಿ ಚರ್ಚೆ ಬಹಳ ನಡೆದಿದೆ. ಭಕ್ತಿ ಎನ್ನುವುದು ಸಂಕೀರ್ಣವಾದ ವಿಷಯ. ಈ ಭಕ್ತಿ ಚಳವಳಿ ಎನ್ನುವುದು ಸರ್ವವ್ಯಾಪಕವಾಗಿದೆ. ಭಕ್ತಿ ಪಂಥದ ನಿಲುವುಗಳು ಭಿನ್ನ ಭಿನ್ನವಾದ ಹರವುಗಳನ್ನು ಒಳಗೊಂಡಿದೆ. ಇಡೀ ಭಕ್ತಿ ಪರಂಪರೆಯನ್ನು ಅವಲೋಕಿಸಿದಾಗ ತಳ ಸಮುದಾಯದ ಪಾತ್ರ ಗಣನೀಯವಾದುದು ಎಂದರು.ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್‌.ಟಿ. ಬಾಗಲಕೋಟಿ ಮಾತನಾಡಿ, ಭಕ್ತಿಯ ಹಲವು ಪ್ರಕಾರಗಳ ಜತೆ ಪರಿಸರ ಭಕ್ತಿಯನ್ನು ಸೇರಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ.ಸಿ. ಕೊಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಸತೀಶ ಕುಲಕರ್ಣಿ, ಸಂತಕವಿ ಕನಕದಾಸ ಅಧ್ಯಯನ ಕೇಂದ್ರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿ ಕರಿಯಪ್ಪ ಎನ್., ವಿವಿಧ ಗೋಷ್ಠಿಗಳ ವಿದ್ವಾಂಸರಾದ ಡಾ. ಗುರುಪಾದ ಮರಿಗುದ್ದಿ, ಶ್ರೀಧರ ಹಗಡೆ ಭದ್ರನ್, ಡಾ. ತಮಿಳ್ ಸೆಲ್ವಿ, ಡಾ. ಗೀತಾ ವಸಂತ, ಡಾ. ಕಾಂತೇಶ ಅಂಬಿಗೇರ, ಡಾ. ಗುಂಡೂರು ಪವನಕುಮಾರ, ಡಾ. ಭಾರತಿದೇವಿ, ಡಾ. ಶಿವರಾಮ ಶೆಟ್ಟಿ ಇತರರು ಇದ್ದರು.ಕಾಲೇಜಿನ ಪ್ರಾಂಶುಪಾಲ ದೀಪಕ ಕೊಲ್ಹಾಪುರೆ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ. ಸಂಜೀವ ನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಶ್ರೀದೇವಿ ದೊಡ್ಡಮನಿ ನಿರೂಪಿಸಿದರು. ಪ್ರೊ. ಹೇಮಂತ ಸಿ.ಎನ್. ವಂದಿಸಿದರು.

ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳಲು ಆಗ್ರಹ

ಹಾನಗಲ್ಲ: ತಾಲೂಕಿನ ವಿವಿಧೆಡೆ ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ತಾಲೂಕು ಆಡಳಿತ ವಿಳಂಬವಿಲ್ಲದೆ ಇದನ್ನು ತಡೆದು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆ ಒತ್ತಾಯಿಸಿತು.ಮಂಗಳವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ ಅವರು, ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಗೋವುಗಳನ್ನು ಹತ್ಯೆ ಮಾಡಿ, ಅನಧಿಕೃತವಾಗಿ ಮಾಂಸ ಮಾರಾಟ ನಡೆಯುತ್ತಿದೆ. ಇದನ್ನು ಸುತ್ತಮುತ್ತಲಿನವರು ವಿರೋಧಿಸಿದರೆ ಅವರಿಗೇ ಬೆದರಿಕೆ ಹಾಕುವ ಪ್ರಕರಣಗಳು ನಡೆಯುತ್ತಿವೆ. ಕೂಡಲೇ ತಹಸೀಲ್ದಾರರು, ಪುರಸಭೆ ಮುಖ್ಯಾಧಿಕಾರಿಗಳು, ಪಶು ವೈದ್ಯಾಧಿಕಾರಿಗಳು ಜಂಟಿಯಾಗಿ ಈ ಅನಧಿಕೃತ ಕಸಾಯಿಖಾನೆಗಳಿಗೆ ದಾಳಿ ಮಾಡಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆ ಅಧ್ಯಕ್ಷ ಎಂ.ಎಸ್. ಪಾಟೀಲ, ನಗರ ಘಟಕದ ಅಧ್ಯಕ್ಷ ಮಹಲಿಂಗಪ್ಪ ಅಕ್ಕಿವಳ್ಳಿ, ಇಕ್ಬಾಲ ಉಪ್ಪಿನ, ನಾಗಪ್ಪ ಬಿದರಗಡ್ಡಿ, ನಾಗನಗೌಡ ಪಾಟೀಲ, ಮಾಲತೇಶ ಸೊಪ್ಪಿನ, ಅಡಿವೆಪ್ಪ ಆಲದಕಟ್ಟಿ, ಎಸ್.ಎಂ. ಕೋತಂಬರಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ