ಕನ್ನಡಪ್ರಭ ವಾರ್ತೆ ಹಾಸನ
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ, ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ‘ಜನಾರೋಗ್ಯಕ್ಕಾಗಿ ಜನಾಂದೋಲನ’ ಆರಂಭಿಸಲಾಗಿದೆ ಎಂದರು. ಮೊದಲಿಗೆ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳು, ಸಂಘ- ಸಂಸ್ಥೆಗಳು ಮತ್ತು ನಾಗರಿಕರಿಂದ ನಿರಂತರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು. ಅದರ ಭಾಗವಾಗಿ ಇಂದು ಮಹಿಳೆ ಮತ್ತು ಮಹಿಳಾ ಪರ ಸಂಘಟನೆಗಳ ವತಿಯಿಂದ ಈ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ ೧೪ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ತಮಗೆ ಸಲ್ಲಿಸಲಾಗುವುದು. ಆಗಸ್ಟ್ ೧೫ರಂದು ನಡೆಯುವ ‘ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ದ ಸ್ಥಳಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಸಂಸದರು, ಮಾನ್ಯ ಶಾಸಕರು ಹಾಗೂ ಮಾನ್ಯ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಐಪಿಎಚ್ ಎಸ್ ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈದ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ಎಕ್ಸ್ ರೇ, ತುರ್ತು ಚಿಕಿತ್ಸಾ ಘಟಕ ಮತ್ತು ಆ್ಯಂಬುಲೆನ್ಸ್ ಹಾಗೂ ತಜ್ಞ ವೈದ್ಯರು ಮತ್ತು ಸಿಬ್ಬಂದಿಯನ್ನು ಒದಗಿಸಬೇಕು. ತಾಲೂಕು ಆಸ್ಪತ್ರೆಗಳನ್ನು ಐಪಿಎಚ್ ಎಸ್ ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಕಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು, ಕೃಷಿಯಲ್ಲಿ ಅಪಾಯಕಾರಿ ಕ್ರಿಮಿ/ ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹೋರಾಟ ಸ್ಥಳಕ್ಕೆ ಬರಬೇಕೆಂದು ಮನವಿ ಮಾಡಿದರು.
ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ, ಹಿರಿಯ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್, ಬಿಜಿವಿಎಸ್ ನ ಸ್ವಾಮಿ ಚಿನ್ನೇನಹಳ್ಳಿ, ಮಮತಾ ಶಿವು, ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಇತರರು ಇದ್ದರು.