ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

KannadaprabhaNewsNetwork |  
Published : Jul 23, 2024, 12:33 AM IST
ಚಿತ್ರ : 22ಎಂಡಿಕೆ4 : ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  | Kannada Prabha

ಸಾರಾಂಶ

ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತಪ್ಪ್ಪ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಸಂಬಂಧಿಸಿ ಸಭೆ ನಡೆಯಿತು. ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧ್ಯಕ್ಷರು ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸರ್ಕಾರ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ಮಾಡಿದರು.

ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಸಲಹೆ ಮಾಡಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97, 570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ. 98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‌ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದ್ದು, ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರು. ಸಹಾಯಧನ ಕಲ್ಪಿಸಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62, 04, 618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24. 65 ಕೋಟಿ ರು. ಭರಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷರಾದ ಮೋಹನ್‌ದಾಸ್(ಮಡಿಕೇರಿ), ಜಾನ್ಸನ್(ವಿರಾಜಪೇಟೆ) ಇತರರು ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ