ಚನ್ನಪಟ್ಟಣ: ಮಹಿಳೆಯನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.
ತಾಲೂಕಿನ ದೊಡ್ಡಮಳೂರಿನ ಚೌಡೇಶ್ವರ ಕಲ್ಯಾಣ ಮಹಲ್ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಂಗಳೂರು ದಕ್ಷಿಣ ಜಿಲ್ಲೆ, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಧರ್ಮಸ್ಥಳ ಸಂಸ್ಥೆಯ ಆಶಯವಾದ ಸ್ತ್ರೀ ಸಬಲೀಕರಣವೇ ಸಮಾಜದ ಸಶಕ್ತೀಕರಣವಾಗಿದ್ದು, ಈ ಟ್ರಸ್ಟ್ ರಾಜ್ಯದ ಅನೇಕ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಲಕ್ಷಾಂತರ ಮಹಿಳೆಯರನ್ನು ಸ್ವ-ಸಹಾಯ ಸಂಘಗಳ ಮೂಲಕ ಸಂಘಟಿಸಿ ಆರ್ಥಿಕ ಸ್ವಾವಲಂಬನೆಗೆ ಪ್ರೇರೇಪಿಸಿದೆ. ಈ ಸಂಘಗಳ ಮೂಲಕ ಮಹಿಳೆಯರು ಸಣ್ಣ ಉಳಿತಾಯದಿಂದ ಹಿಡಿದು ಸ್ವಂತ ಉದ್ಯಮ ಆರಂಭಿಸುವ ಮಟ್ಟಕ್ಕೆ ಬಂದಿದ್ದಾರೆ. ಹೊಲಿಗೆ, ಹಸ್ತಕಲಾ ವಸ್ತು ತಯಾರಿ, ಪಶುಸಂಗೋಪನೆ, ಗೃಹೋದ್ಯಮ ಇತ್ಯಾದಿ ಕ್ಷೇತ್ರಗಳಲ್ಲಿ ಮಹಿಳೆಯರು ತಮಗೆ ತಾವೇ ನಿಂತುಕೊಳ್ಳುವ ಸಾಮರ್ಥ್ಯ ಪಡೆದಿದ್ದಾರೆ. ಇದರಿಂದ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚಿದೆ ಎಂದು ಹೇಳಿದರು.
ಇದೇ ವೇಳೆ ರೈತರ ಆರ್ಥಿಕ ಬಲವರ್ಧನೆಗೆ ಪ್ರಗತಿ ಬಂಧು ಯೋಜನೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ಆರೋಗ್ಯ ಶಿಬಿರಗಳು, ಪರಿಸರ ಸಂರಕ್ಷಣೆ, ಕುಡಿಯುವ ನೀರು, ಸ್ವಚ್ಛತಾ ಶೌಚಾಲಯಗಳಂತಹ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಧರ್ಮಸ್ಥಳ ಯೋಜನೆ ಯಶಸ್ವಿಯಾಗಿ ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಆಶೀರ್ವಾದದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಸಮಾಜದ ಬದುಕಿಗೆ ಬೆಳಕು ತಂದಿದೆ. ಕುಡಿತದ ಚಟ ಅಂಟಿಸಿಕೊಂಡವರಿಗೆ ಆ ಚಟ ಬಿಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಹಮ್ಮಿಕೊಳ್ಳುವ ಮದ್ಯವರ್ಜನ ಶಿಬಿರಗಳು ರಾಜ್ಯದ ಎಷ್ಟೋ ಸಂಸಾರಗಳನ್ನು ಉಳಿಸಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ಎಸ್. ಹರೀಶ್ಕುಮಾರ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕ ರಾಜೇಂದ್ರ, ಚನ್ನಪಟ್ಟಣ ತಹಸೀಲ್ದಾರ್ ಬಿ.ಎನ್.ಗಿರೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೈಸೂರು ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ, ಜಿಲ್ಲಾ ನಿರ್ದೇಶಕ ಜಯಕರ್ ಶೆಟ್ಟಿ, ಯೋಜನೆಯ ತಾಲೂಕು ಯೋಜನಾಧಿಕಾರಿ ಎಸ್.ರೇಷ್ಮಾ, ನಗರಸಭೆ ಅಧ್ಯಕ್ಷ ವಾಸಿಲ್ ಅಲಿಖಾನ್, ಜಿಲ್ಲಾ ಜನ ಜಾಗೃತಿ ವೇದಿಕೆಯ ಸರ್ವ ಸದಸ್ಯರು, ಅಪಾರ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು.ಪೊಟೋ೮ಸಿಪಿಟಿ೧:
ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಚೌಡೇಶ್ವರ ಕಲ್ಯಾಣ ಮಹಲ್ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶದಲ್ಲಿ ಸಂಸದ ಡಾ. ಮಂಜುನಾಥ್, ಶಾಸಕ ಯೋಗೇಶ್ವರ್ ಇತರರು ಭಾಗವಹಿಸಿದ್ದರು.