ಹೊಸದುರ್ಗ: ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ಹೊಸದುರ್ಗ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾಕಾರರು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ, ಹಿಂದೂ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ತಂದವರಿಗೆ ಶಿಕ್ಷೆ ಕೊಡದೆ ಎಸ್ಐಟಿ ತನಿಖೆಯ ಮೂಲಕ ಕಣ್ಣೊರೆಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಚಾಮುಂಡಿ ಬೆಟ್ಟ ಹಿಂದೂ ಧರ್ಮಕ್ಕೆ ಸೇರಿದ್ದ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ, ಆದರೆ ಹಿಂದೂ ಧರ್ಮದ ತಳಹದಿಯ ಮೇಲೆ ದೇವಸ್ಥಾನಗಳು ನಿಂತಿವೆ. ನಾವೇನು ಅನ್ಯ ಧರ್ಮದ ವಿರೋಧಿಗಳಲ್ಲ ನಮ್ಮನ್ನು ಚರ್ಚಿಗೆ ಪ್ರಾರ್ಥಿಸಲು ಮಸೀದಿಗೆ ನಮಾಜ್ ಮಾಡಲ್ಲ ಬನ್ನಿ ಎಂದು ಯಾರೋ ಕರೆಯುವುದಿಲ್ಲ. ನಾವ್ಯಾರು ಅವರನ್ನು ದೇವಸ್ಥಾನಕ್ಕೆ ಬರಬೇಡಿ ಎನ್ನುವುದಿಲ್ಲ. ಕಾಂಗ್ರೆಸ್ ಸರ್ಕಾರ ಕೇವಲ ಮತ ಬ್ಯಾಂಕಿಗೋಸ್ಕರ ಹಿಂದೂ ಧರ್ಮವನ್ನು ಹೀಯಾಳಿಸುವ ಕೆಲಸವನ್ನು ಇಂದಿನಿಂದಲೂ ಮಾಡಿಕೊಂಡು ಬರುತ್ತಿದೆ. ಇಂತಹ ಪಕ್ಷಕ್ಕೆ ರಾಜ್ಯದ ಜನತೆ ಸರಿಯಾದ ಉತ್ತರ ಮುಂದಿನ ದಿನಗಳಲ್ಲಿ ನೀಡಲಿದ್ದಾರೆ ಎಂದು ಕಿಡಿಕಾರಿದರು.ಬಿಜೆಪಿ ಅಧಿಕಾರಕ್ಕೆ ಅಂಟಿಕೊಳ್ಳದೆ ಧರ್ಮದ ಉಳಿವಿಗಾಗಿ ಯಾವುದೇ ತೆರನಾದ ಧರ್ಮ ಯುದ್ಧಕ್ಕೂ ಸಿದ್ಧವಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ ಒಂದರಂದು ಧರ್ಮಸ್ಥಳದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಆಗಮಿಸಲಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಕಲ್ಮಟ್, ತಾಲೂಕು ಅಧ್ಯಕ್ಷ ಅಣ್ಣಪ್ಪ, ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ. ಮುಖಂಡರಾದ ಗುರುಸ್ವಾಮಿ, ಎಚ್.ಸಿ.ಮಲ್ಲಿಕಾರ್ಜುನ್, ತಮ್ಮಣ್ಣ, ಶಿವು ಮಠ, ದಿಲ್ ಸೆ ದಿಲೀಪ್, ಗೂಳಿಹಟ್ಟಿ ಕೃಷ್ಣಮೂರ್ತಿ, ಮಲ್ಲಿಕಾರ್ಜುನ್ ಗೂಳಿಹಟ್ಟಿ ಜಗದೀಶ್, ದೊಡ್ಡಯ್ಯ ಸೇರಿದಂತೆ ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.