ಮರ್ಯಾದೆಗೇಡು ಹತ್ಯೆಗೆ ದಲಿತ ಸಂಘಟನೆಗಳ ಕಿಚ್ಚು-18 ಮಂದಿ ವಿರುದ್ಧ ಎಫ್‌ಐಆರ್‌

Published : Dec 23, 2025, 11:10 AM IST
Hubballi Honour Killing

ಸಾರಾಂಶ

ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಮರ್ಯಾದೆಗೇಡು ಕೃತ್ಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ 18 ಮಂದಿ ವಿರುದ್ಧ ಎಫ್‌ಐಆರ್‌

  ಹುಬ್ಬಳ್ಳಿ :  ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಮರ್ಯಾದೆಗೇಡು ಕೃತ್ಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ 18 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಸೋಮವಾರ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದ ಮಾನ್ಯಾ ಪಾಟೀಲ (19) ಕೊಲೆಗೆ ಸಂಬಂಧಿಸಿದಂತೆ ಮೃತಳ ಪತಿ ವಿವೇಕಾನಂದ ದೊಡ್ಡಮನಿ ಅವರು ಮಾನ್ಯಾ ಅವರ ತಂದೆ ಪ್ರಕಾಶಗೌಡ ಪಾಟೀಲ, ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ.

ದೂರಿನಲ್ಲಿ ಏನಿದೆ?:

ಮಾನ್ಯಾ ಅವರನ್ನು ಅದೇ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ವಿವೇಕಾನಂದ ಪ್ರೀತಿಸಿ ಮದುವೆಯಾಗಿದ್ದು, ಮಾನ್ಯಾ ಕುಟುಂಬದವರು ಕೋಪಗೊಂಡಿದ್ದರು. ಹಾಗಾಗಿ ಅವರು ಭಾನುವಾರ ಸಂಜೆ 5 ಗಂಟೆಗೆ ಇನಾಂವೀರಾಪುರದಲ್ಲಿ ವಿವೇಕಾನಂದನ ತಂದೆ ಮರಿಯಪ್ಪ, ಮಾವ ಸುನೀಲ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡಿಸಿ ಕೊಲೆಗೆ ಯತ್ನಿಸಿದ್ದಾರೆ. ಬಳಿಕ ಗುಂಪುಗೂಡಿ, ವಿವೇಕಾನಂದರ ಮನೆಗೆ ಹೋಗಿ ಜಾತಿ ನಿಂದನೆ ಮಾಡಿದ್ದು, ವಿವೇಕಾನಂದರ ತಾಯಿ ರೇಣುಕಾ ಹಾಗೂ ಪತ್ನಿ ಮಾನ್ಯಾ ಸೇರಿದಂತೆ ಮನೆಯಲ್ಲಿದ್ದವರ ಮೇಲೆ ಕೊಡಲಿ, ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ:

ಮೃತಪಟ್ಟ ಮಾನ್ಯಾಳ ಮರಣೋತ್ತರ ಪರೀಕ್ಷೆಯನ್ನು ಕೆಎಂಸಿಆರ್‌ಐನಲ್ಲಿ ನಡೆಸಿ ಶವವನ್ನು ಸೋಮವಾರ ಪತಿಯ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘಟನೆಗಳು ಪಾರ್ಥೀವ ಶರೀರದ ಮೆರವಣಿಗೆ ನಡೆಸಿದವು. ಬಳಿಕ ಸ್ವಗ್ರಾಮ ಇನಾಂವೀರಾಪುರಕ್ಕೆ ತೆಗೆದುಕೊಂಡು ಹೋಗಿ ಗಂಡನ ಮನೆಯವರು ಪೊಲೀಸ್‌ ಸರ್ಪಗಾವಲಿನಲ್ಲಿ ಅಂತ್ಯಸಂಸ್ಕಾರ ನಡೆಸಿದರು. ಆದರೆ, ಕೂಗಳತೆಯ ದೂರದಲ್ಲಿದ್ದ ಯುವತಿ ತವರು ಮನೆಯ ಯಾರೊಬ್ಬರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರಲಿಲ್ಲ.

ಹೊಂಚು ಹಾಕಿ ಕೊಂದರು ನಾನು, ಮಾನ್ಯ 2 ವರ್ಷದಿಂದ ಪ್ರೀತಿಸುತ್ತಿದ್ದೆವು. ಆಕೆಯ ಕುಟುಂಬದವರಿಗೆ ಇಷ್ಟವಿಲ್ಲದಿದ್ದರೂ ನಾವು ಓಡಿಹೋಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದೆವು. ಇತ್ತೀಚಿಗಷ್ಟೇ ಊರಿಗೆ ವಾಪಸ್‌ ಬಂದಿದ್ದೆವು. ಈಗ ಹೊಂಚುಹಾಕಿ ನನ್ನ ಪತ್ನಿಯನ್ನು ಕೊಲೆ ಮಾಡಿದ್ದಾರೆ.

- ವಿವೇಕಾನಂದ, ಮೃತ ಮಾನ್ಯಾಳ ಪತಿ

PREV
Stay updated with the latest news, developments and happenings from Dharwad district (ಧಾರವಾಡ ಸುದ್ದಿ) — including politics, local governance, civic issues, education, crime, social events and more. All in Kannada, from Kannada Prabha.
Read more Articles on

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
ಉದ್ಯಮ ಸ್ಥಾಪಿಸುವ ಕುರಿತು ಯುವಕರಿಗೆ ತರಬೇತಿ ನೀಡಿ: ಕೇಂದ್ರ ಸಚಿವ ಜೋಶಿ