ಧಾರವಾಡ ರೈಲ್ವೆ ಮಾರ್ಗ ಸಮೀಕ್ಷೆ ತ್ವರಿತವಾಗಲಿ:ಸಂಸದ ಜಗದೀಶ್ ಶೆಟ್ಟರ್

KannadaprabhaNewsNetwork |  
Published : Mar 05, 2025, 12:30 AM IST
ಸಂಸದ ಜಗದೀಶ ಶೆಟ್ಟರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಕಾಮಗಾರಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಮಾರ್ಚ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ- ಧಾರವಾಡ ಮಾರ್ಗದ ರೈಲ್ವೆ ಯೋಜನೆಗೆ ಮಂಜೂರಾತಿ ದೊರೆತು ಬಹಳ ದಿನಗಳು ಕಳೆದಿವೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ, ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ. ಮಾರ್ಚ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಲಗಾ-ಮಚ್ಚೆ ಮಾರ್ಗವಾಗಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂ-ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಾನಾಪುರ-ರಾಮನಗರ ರೈಲ್ವೆ ಮಾರ್ಗದಲ್ಲಿ ಸಣ್ಣ ಪುಟ್ಟ ಸೇತುವೆಗಳಿದ್ದು, ಮೇಲ್ಸೇತುವೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಬಾಕಿ ಉಳಿದಿರುವ ಭೂಸ್ವಾಧೀನವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಬಳಿಕ ಏಪ್ರಿಲ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ೨೪/೭ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ವಿಳಂಬವಾಗದಂತೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗಳೊಳ್ಳಬೇಕು ಎಂದು ಸೂಚಿಸಿದರು.

ಖಾನಾಪುರ ತಾಲೂಕಿನ ಕುಸುಮಳ್ಳಿ ಸೇತುವೆ ನಿರ್ಮಾಣಕ್ಕೆ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸಲಾಗಿದೆ ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಬೆಳಗಾವಿ ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಜಮೀನುಗಳನ್ನು ಸಮೀಕ್ಷೆ ನಡೆಸಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ತಕರಾರು ಇರುವ ಊರುಗಳಿಗೆ ನೋಟಿಸ್ ಜಾರಿ ಮಾಡಿ ಸ್ಥಳೀಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ಕೆಲವು ರೈತರು ನೋಟಿಸ್ ಜಾರಿ ಮಾಡಿದರೂ ನೋಟಿಸ್ ಸ್ವೀಕರಿಸುತ್ತಿಲ್ಲ. ಹಾಗಾಗಿ ಸಮೀಕ್ಷೆ ಸಂದರ್ಭಲ್ಲಿ ಅಡತಡೆಗಳು ಉಂಟಾಗುತ್ತಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬಾಕಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಭೂ ಸಮೀಕ್ಷೆ ಪೂರ್ಣಗೊಳಿಸಬೇಕು. ಸಮೀಕ್ಷೆ ಬಳಿಕ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು. ನೋಟಿಸ್ ಸ್ವೀಕರಿಸದ ರೈತರೊಂದಿಗೆ ಚರ್ಚಿಸಿ ಸರ್ಕಾರದ ಮಾರ್ಗಸೂಚಿ ಅನ್ವಯ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕಾಗಿದೆ ಎಂದು ತಿಳಿಸಬೇಕು. ಇದಕ್ಕೆ ಬೆಳಗಾವಿ ಉಪ ವಿಭಾಗಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ತಿಳಿಹೇಳಬೇಕು ಎಂದು ಸೂಚಿಸಿದರು. ತಿಳಕವಾಡಿ ರೈಲ್ವೆ ಗೇಟ್ ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕಾಮಗಾರಿ ಹಂತದಲ್ಲಿ ತಾನಾಜಿ ರೈಲ್ವೆ ಗೇಟ್ ಈಗಾಗಲೇ ಬಂದ್ ಇರಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಳಗಾವಿ ವಿಶೇಷ ಭೂ ಸ್ವಾಧೀನಾಧಿಕಾರಿ ಬಲರಾಮ ಚವ್ಹಾಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಾಗಲಕೋಟೆ ಭೂ ವಿಶೇಷ ಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌