ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಚಿಸಲಾದ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಮಾಸ್ಟರ್, ಕ್ಯಾಪ್ಟನ್ ಮತ್ತು ತುರ್ತು ಸ್ಪಂದನಾ ತಂಡದ ಸದಸ್ಯರಿಗೆ ಎನ್ಡಿಆರ್ಎಫ್ ಯೋಧರಿಂದ ಪ್ರಥಮ ಪ್ರತಿಕ್ರಿಯೆ ತರಬೇತಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶೌರ್ಯ ಸ್ವಯಂಸೇವಕರು ಪಾಕೃತಿಕ ವಿಪತ್ತುಗಳ ಸಮಯದಲ್ಲಿ ಆಪತ್ತಿನಲ್ಲಿ ಇರುವವರಿಗೆ ಸಕಾಲದಲ್ಲಿ ಸ್ಪಂದಿಸಿ ನೆರವಾಗುತ್ತಿದ್ದಾರೆ. ಸಾಮಾಜಿಕ ಸೇವೆಗಳ ಮೂಲಕ ಜನರಿಗೆ ಆಪ್ತರಾಗಿದ್ದಾರೆ. ವಿಪತ್ತು ನಿರ್ವಹಣೆಯ ಸಮಯದಲ್ಲಿ ಸ್ವಯಂಸೇವಕರು ತಮ್ಮ ರಕ್ಷಣೆಯನ್ನು ನೋಡಿಕೊಳ್ಳಬೇಕು ಎಂದರು.
ಡಾ. ಹೇಮಾವತಿ ವಿ. ಹೆಗ್ಗಡೆ ಅವರು ತಾಲೂಕು ಸಮಿತಿಯ ಮಾಸ್ಟರ್ ಮತ್ತು ಕ್ಯಾಪ್ಟನ್ ರಿಗೆ ಹಣ್ಣಿನ ಗಿಡಗಳನ್ನು ವಿತರಣೆ ಮಾಡಿ ಸಾಮಾಜಿಕ ಕಳಕಳಿ ಹೊಂದಿರುವ ಸ್ವಯಂಸೇವಕರ ಚಟುವಟಿಕೆಗಳಿಗೆ ಮೆಚ್ಚುಗೆ ಸೂಚಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಮಾತನಾಡಿ, ವಿಪತ್ತು ನಿರ್ವಹಣಾ ಸ್ವಯಂಸೇವಕರು ರಾಜ್ಯದ 91 ತಾಲೂಕುಗಳಲ್ಲಿ 7704 ಮಂದಿ ಇದ್ದು ನಾಲ್ಕು ಲಕ್ಷಕ್ಕೂ ಅಧಿಕ ಸೇವಾ ಚಟುವಟಿಕೆಗಳನ್ನು ನಡೆಸಿದ್ದಾರೆ. ಅಗ್ನಿಶಾಮಕದಳ, ಪೊಲೀಸ್ ಇಲಾಖೆ, ಎನ್.ಡಿ.ಆರ್.ಎಫ್ ಸಂಸ್ಥೆಗಳ ಜೊತೆಗೆ ಕಾರ್ಯ ತತ್ಪರರಾಗಿದ್ದಾರೆ. ಬಡವರಿಗೆ ಮನೆ ನಿರ್ಮಾಣ, ರಸ್ತೆ ರಿಪೇರಿ, ಗಿಡ ನಾಟಿಯಂತಹ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದಾರೆ ಎಂದರು. ಸ್ವಯಂಸೇವಕರು ಇತರರ ಒಳಿತನ್ನು ಬಯಸುವವರಾಗಿದ್ದಾರೆ. ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದರು.
ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಯಶೋಧರ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ತಾಲೂಕುಗಳ 200 ಸ್ವಯಂಸೇವಕರು ಭಾಗವಹಿಸಿದ್ದರು.