ಕೇಂದ್ರದ ತಾರತಮ್ಯದಿಂದ ಕನ್ನಡಕ್ಕೆ ತೊಡಕು

KannadaprabhaNewsNetwork |  
Published : Oct 13, 2024, 01:06 AM IST
ಚಿತ್ರ 12ಬಿಡಿಆರ್2ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಶನಿವಾರ ಕನ್ನಡ ಜ್ಯೋತಿ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಮಟೆ ಬಾರಿಸುವ ಮೂಲಕ ಸ್ವಾಗತಿಸಿಕೊಂಡರು. ನಾಡೋಜ. ಡಾ. ಬಸವಲಿಂಗ ಪಟ್ಟದ್ದೇವರು ಇದ್ದರು. | Kannada Prabha

ಸಾರಾಂಶ

ಭಾಲ್ಕಿಯಲ್ಲಿ ಕನ್ನಡ ರಥ ಯಾತ್ರೆ ಸ್ವಾಗತಿಸಿದ ಸಚಿವ ಖಂಡ್ರೆ

ಕನ್ನಡಪ್ರಭ ವಾರ್ತೆ ಭಾಲ್ಕಿ

ಜಗತ್ತಿನಲ್ಲಿಯೇ ಅತ್ಯಂತ ಸಿರಿವಂತ ಭಾಷೆ ಕನ್ನಡ ಭಾಷೆಯಾಗಿದ್ದರೂ ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ ಕನ್ನಡ ಬೆಳೆಯುವಲ್ಲಿ ಹಿನ್ನಡೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಶನಿವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥ ಯಾತ್ರೆಯನ್ನು ಸ್ವಾಗತಿಸಿ ಮಾತನಾಡಿ, ಕನ್ನಡ ಭಾಷೆಗೆ ತನ್ನದೇ ಆದ ಶ್ರೇಷ್ಠ ಪರಂಪರೆ, ಸಂಸ್ಕೃತಿ ಇದೆ. ಜಗತ್ತಿನಲ್ಲಿಯೇ ಅತ್ಯಂತ ಸಿರಿವಂತ ಭಾಷೆ ಕನ್ನಡವಾಗಿದೆ. ದೇಶದಲ್ಲಿಯೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಭಾಷೆಯಾಗಿದ್ದರೂ, ಕರ್ನಾಟಕ ರಾಜ್ಯದಲ್ಲಿಯೇ ಕನ್ನಡ ಉಳಿಸಲು ಹೋರಾಡುವ ಪರಿಸ್ಥಿತಿ ಬಂದೊದಗಿದೆ ಎಂದರು.

ರಾಷ್ಟ್ರದಲ್ಲಿಯೇ ಅತೀ ಹೆಚ್ಚು ತೆರಿಗೆ ನೀಡುವ ರಾಜ್ಯ ಕರ್ನಾಟಕವಾಗಿದೆ, ಆದರೆ ಕೇಂದ್ರದಿಂದ ಬರುವ ಅನುದಾನ ಮಾತ್ರ ಇತರೆ ಎಲ್ಲಾ ರಾಜ್ಯಗಳಿಗಿಂತಲೂ ಕಡಿಮೆ. ಇಂತಹ ತಾರತಮ್ಯ ಹೋಗಲಾಡಿಸುವ ಕಾರ್ಯವಾಗಬೇಕು. ಅದಕ್ಕಾಗಿ ನಾವೆಲ್ಲರೂ ಒಕ್ಕೋರಲಿನಿಂದ ಹೋರಾಟ ಮಾಡಬೇಕಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಉತ್ಕೃಷ್ಟ ಸಮ್ಮೇಳನವಾಗಿದೆ. ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಹೊರಡಿಸುತ್ತಿರುವುದು ಇದು ಪ್ರಥಮವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು, ಮಂಡ್ಯದಲ್ಲಿ ನಡೆಯುವ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾದ್ಯಕ್ಷ ಸುರೇಶ ಚನಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೆರೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳಕರ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಕೆ.ಡಿ ಗಣೇಶ, ಜೈರಾಜ ಕೊಳ್ಳಾ, ಸಂಜುಕುಮಾರ ನಾವದಗಿ, ಮಲ್ಲಮ್ಮ ಪಾಟೀಲ್‌, ಸುನಿತಾ ಮಮ್ಮಾ, ಚಂದ್ರಕಾಂತ ತಳವಾಡೆ, ಐಜಿಕ ಬಂಗಾರೆ, ಸಂತೋಷ ಪಾಟೀಲ್‌, ಜಯರಾಜ ದಾಬಶೆಟ್ಟಿ ಸೇರಿದಂತೆ ಹಲವರು ಇದ್ದರು.

ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ :

ಭಾಲ್ಕಿ ತಾಲೂಕಿನ ಗಡಿ ಸಾಯಿಗಾಂವ್‌ ಹತ್ತಿರ ಶನಿವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜ್ಯೋತಿ ರಥಯಾತ್ರೆಗೆ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೆರೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ