ಕನ್ನಡಪ್ರಭ ವಾರ್ತೆ ಮಂಗಳೂರು
ಸಾಮಾನ್ಯ ಸಭೆಯ ಆರಂಭದಲ್ಲಿ ವಿವಿಧ ವಿಚಾರಗಳ ಚರ್ಚೆಯ ಬಳಿಕ ಈ ವಿಷಯವನ್ನು ಕೈಗೆತ್ತಿಕೊಂಡ ಅಬ್ದುಲ್ ರವೂಫ್, ದಾಖಲೆಗಳನ್ನು ತೋರಿಸಿ ನೇರವಾಗಿ ಆಯುಕ್ತರ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದರು. ಅಬ್ದುಲ್ ರವೂಫ್ ಮಾತನಾಡುತ್ತಿದ್ದರೆ, ಆಡಳಿತ ಪಕ್ಷದ ಯಾರೊಬ್ಬ ಸದಸ್ಯರೂ ಮರುಮಾತನಾಡದೆ ತಮ್ಮ ಪರೋಕ್ಷ ಒಪ್ಪಿಗೆ ಸೂಚಿಸಿದರು.
ಒಂದು ಹಂತದಲ್ಲಿ ಸ್ವತಃ ಆಯುಕ್ತರು ಸ್ಪಷ್ಟನೆ ನೀಡಲು ಮುಂದಾದರೂ, ಮೇಯರ್ ಅದಕ್ಕೆ ಹೆಚ್ಚಿನ ಅವಕಾಶ ನೀಡದೆ ವಿಪಕ್ಷ ಸದಸ್ಯರಿಗೆ ಮಾತು ಮುಂದುವರಿಸಲು ಸೂಚಿಸಿದ್ದು, ಇಡೀ ಸದನ ಈ ವಿಚಾರದಲ್ಲಿ ಒಗ್ಗಟ್ಟಾಗಿದೆ ಎಂಬ ಸ್ಪಷ್ಟ ಸಂದೇಶ ಸಾರಿತ್ತು.ಆರೋಪಗಳೇನು?: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 20 ವರ್ಷಕ್ಕಿಂತಲೂ ಹಿಂದೆ ನಿರ್ಮಾಣವಾದ ಅನೇಕ ವಸತಿ, ಕಮರ್ಷಿಯಲ್ ಕಟ್ಟಡಗಳು ಕಾನೂನು ಪ್ರಕಾರ ನಿರ್ಮಾಣವಾಗಿಲ್ಲ ಎನ್ನುವ ಕಾರಣಕ್ಕೆ ಇಷ್ಟು ವರ್ಷ ಕಳೆದರೂ, ಹಲವು ಆಯುಕ್ತರು ಬಂದು ಹೋಗಿದ್ದರೂ ಕಂಪ್ಲೀಶನ್ ಸರ್ಟಿಫಿಕೆಟ್ ನೀಡಿರಲಿಲ್ಲ. ಆದರೆ ಈಗಿನ ಆಯುಕ್ತರು ಬಂದ ಬಳಿಕ ಅಂತಹ ಕಟ್ಟಡಗಳಿಗೆ ಕಂಪ್ಲೀಶನ್ ಸರ್ಟಿಫಿಕೆಟ್ ನೀಡಿದ್ದಾರೆ. ಯಾವ ಆಧಾರದ ಮೇಲೆ ನೀಡಿದ್ದು? ಇದು ಭ್ರಷ್ಟಾಚಾರ ಅಲ್ವಾ ಅಂತ ಅಬ್ದುಲ್ ರವೂಫ್ ಆರೋಪಿಸಿದರು.
ವಿವಿಧ ಕಾಮಗಾರಿಗಳಿಗೆ ಪಾಲಿಕೆಯಲ್ಲಿ ಕೇವಲ 60 ಕೋಟಿ ರು. ಹಣ ಇರುವುದು ಗೊತ್ತಿದ್ದೂ 160 ಕೋಟಿ ರು.ಗಳನ್ನು ಆಯುಕ್ತರು ಮಂಜೂರು ಮಾಡಿಸಿದ್ದಾರೆ. ತುರ್ತು ಕಾಮಗಾರಿಗಳಿಗೆ 5 ಲಕ್ಷ ರು.ವರೆಗೆ ರಿಯಾಯ್ತಿ ಇದೆ. ಆದರೆ ಆಯುಕ್ತರು ಸದಸ್ಯರನ್ನು ಕತ್ತಲೆಯಲ್ಲಿಟ್ಟು 1 ಲಕ್ಷ ರು.ಗಿಂತ ಹೆಚ್ಚಿನ ಕಾಮಗಾರಿಗಳಿಗೆ ಇ-ಟೆಂಡರ್ ಆದೇಶ ಮಾಡಿದ್ದಾರೆ ಎಂದು ದೂರಿದರು.