ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ ಸೌಲಭ್ಯ: ಸಂಸದ ಗದ್ದಿಗೌಡರ

KannadaprabhaNewsNetwork |  
Published : Feb 29, 2024, 02:07 AM IST
(ಫೋಟೋ 28ಬಿಕೆಟಿ5, ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ಪಿ.ಸಿ.ಗದ್ದಿಗೌಡರ) | Kannada Prabha

ಸಾರಾಂಶ

ಬಾಗಲಕೋಟೆ: ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ತೋಟಗಾರಿಕೆ ಇಲಾಖೆ ಮತ್ತು ಕ್ಯಾಪೆಕ್ ಜಂಟಿ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಖರೀದಿದಾರರ ಹಾಗೂ ಮಾರಾಟಗಾರರ ನಡುವಿನ ಅಂತರ ದೂರವಿತ್ತು. ಇದರಿಂದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿರಲಿಲ್ಲ. ಮಧ್ಯವರ್ಥಿಗಳು ಕಡಿಮೆ ಬೆಲೆಗೆ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇದರಿಂದ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ರೈತರು ಬೆಳೆದ ಹಣ್ಣು, ತರಕಾರಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖರೀದಿದಾರರು ಮತ್ತು ಮಾರಾಟಗಾರರ ನೇರ ಸಂಪರ್ಕ ಕಲ್ಪಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಇದರಿಂದ ಬೆಳೆ ಮಾರಾಟ ಮಾಡಲು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ತೋಟಗಾರಿಕೆ ಪ್ರದೇಶದ ವ್ಯಾಪ್ತಿ ಹೆಚ್ಚಿದ್ದು, ಈ ಭಾಗದ ರೈತರಿಗೆ ಹಲವಾರು ಕಂಪನಿಗಳ ಜೊತೆ ಒಪ್ಪಂದ ಮಾಡಿಸು ಮೂಲಕ ಖರೀದಿದಾರರ ಬೇಡಿಕೆಗೆ ತಕ್ಕಂತೆ ಉತ್ಪನ್ನ ಮಾರಾಟ ಮಾಡಿ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ, ಜಿಲ್ಲೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯವಿದ್ದು, ಉತ್ತಮ ಹವಾಮಾನ, ನೀರು ಇರುವುದರಿಂದ ಉತ್ತಮ ತರಕಾರಿ ಹಾಗೂ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಆದರೆ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಇದಕ್ಕೆ ಕಾರಣ ಮಾರುಕಟ್ಟೆಯ ಕೌಶಲ್ಯತೆಯ ಕೊರತೆ. ರೈತರು ಸಾಕಷ್ಟು ಶ್ರಮವಹಿಸಿ ಬೆಳೆ ಬೆಳೆಯುತ್ತಾರೆ. ಅದನ್ನು ಮಾರುಕಟ್ಟೆಗೆ ತರಲು ಮಾರುಕಟ್ಟೆಯ ಕೌಶಲ್ಯ ಅರಿವು ಅಗತ್ಯವಾಗಿದೆ. ರೈತರನ್ನು ಖಾಸಗಿ ಮಾರುಕಟ್ಟೆಗೆ ಸಂಪರ್ಕ ಮಾಡಿದಾಗ ಮಾತ್ರ ಉತ್ತಮ ಮಾರುಕಟ್ಟೆಯ ಮೌಲ್ಯ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಪಂ ಸಿಇಒ ಶಶಿಧರ ಕುರೇರ್ ಮಾತನಾಡಿ, ತೋಟಗಾರಿಕೆ ಬೆಳೆಗಳಿಗೆ 1980 ರಿಂದ ಆದ್ಯತೆ ನೀಡುತ್ತಿದ್ದು, ಇದಕ್ಕೆ ಪೂರಕವಾಗಿ ಸರ್ಕಾರ 2005ರಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮೂಲಕ ಹಲವಾರು ಯೊಜನೆಗಳನ್ನು ರೂಪಿಸಿ ರೈತರಿಗೆ ಪೂರಕ ವಾತಾವರಣ ಸೃಷ್ಟಿಸಿದೆ. ಕಲೆಕ್ಷನ್ ಕ್ರೆಡಿಟ್ ಲಿಂಕೆಜ್ ಮಾಡಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಯಿತು. ರೈತರು ಬೇಡಿಕೆಗೆ ಅನುಸಾರವಾಗಿ ಬೆಳೆ ಬೆಳೆದಲ್ಲಿ ಉತ್ತಮ ದರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಬೆಂಗಳೂರಿನ ಲಾಲ್‌ಬಾಗ್‌ ನ ಅಪರ ನಿರ್ದೇಶಕ ಡಾ.ಪಿ.ಎಂ. ಸೊಬರದ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿತ್ತು. ಸಂಸದ ಪಿ.ಸಿ. ಗದ್ದಿಗೌಡರ ಸೇರಿದಂತೆ ಅಧಿಕಾರಿಗಳು ಉತ್ಪನ್ನಗಳನ್ನು ವೀಕ್ಷಿಸಿದರು.

ತೋಟಗಾರಿಕೆ ವಿವಿಯ ಡೀನ್ ಡಾ.ಲಕ್ಷ್ಮೀ ನಾರಾಯಣ ಹೆಗಡೆ, ಕ್ಯಾಪೆಕ್ ನ ವ್ಯವಸ್ಥಾಪಕ ನಿರ್ದೇಶಕ ಎಂ.ಎಚ್. ಬಂಥನಾಳ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನವರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟೆ, ಲಾಲ್ಬಾಗ್ ನ ಉಪನಿರ್ದೇಶಕಿ ಶಮಾ ಪಾಟೀಲ, ತೋವಿವಿಯ ಪ್ರೊ.ವಸಂತ ಗಾಣಿಗೇರ, ತೋಟಗಾರಿಕೆ ಸಹಾಯಕ ನಿರ್ದೇಶಕ ಬಸಪ್ಪ ಬೇನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ