ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಆಯೋಜಿಸದೇ ನಿರ್ಲಕ್ಷ್ಯ
ಕನ್ನಡಪ್ರಭ ವಾರ್ತೆ ಕಾರವಾರ
ಡಿ. 3 ವಿಶ್ವ ಅಂಗವಿಕಲರ ದಿನಾಚರಣೆಯಾಗಿದ್ದರೂ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ ಕಾರ್ಯಕ್ರಮ ಆಯೋಜಿಸದೇ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ವಿಕಲಚೇತನರ ಒಕ್ಕೂಟವು ದಿನಾಚರಣೆಯನ್ನು ಬಹಿಷ್ಕರಿಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಕಳೆದ ಮೂರು-ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನೇ ನಡೆಸದ ಕಾರಣ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಸತೀಶ ನಾಯ್ಕ ಆರೋಪಿಸಿದ್ದಾರೆ.ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಿಗದಿಪಡಿಸಲಾದ ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ಅಂಗವಿಕಲರ ಅಭಿವೃದ್ಧಿಗೆ ಬಳಸಬೇಕು. ಪ್ರಸ್ತುತ ನೀಡುತ್ತಿರುವ ಮಾಸಾಶನ ಜೀವನ ನಿರ್ವಹಣೆಗೆ ಸಾಲುತ್ತಿಲ್ಲವಾದ್ದರಿಂದ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ತಲಾ ₹5,000ದಂ ಒಟ್ಟು ₹10,000 ಮಾಶಾಸನ ನೀಡಬೇಕು. ಅಲ್ಲದೇ, ಪ್ರತಿ ತಿಂಗಳ 5 ರಿಂದ 10 ನೇ ತಾರೀಖಿನೊಳಗೆ ಪಿಂಚಣಿ ಪಾವತಿಯಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಂಗವಿಕಲರ ಕಾಯ್ದೆ 2016ನ್ನು ಸಮರ್ಪಕವಾಗಿ ಜಾರಿಗೆ ತರಬೇಕು, ಪುರುಷ ಅಂಗವಿಕಲರಿಗೂ ರಾಜ್ಯಾದ್ಯಂತ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡಬೇಕು ಹಾಗೂ ಜಿಲ್ಲೆಯ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಲಿಫ್ಟ್, ವೀಲ್ಚೇರ್ ಮತ್ತು ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಯಿತು. ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಲಿಖಿತ ಉತ್ತರ ನೀಡದಿದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಲಾಗಿದೆ. ಈ ಸಂದರ್ಭದಲ್ಲಿ ಸದಸ್ಯ ಪ್ರವೀಣ ಶೆಟ್ಟಿ ಇದ್ದರು.