ಬೆಳಗಾವಿ: ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆ ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿದೆ. ಆದರೂ, ಮತ್ತೆ ಮತ್ತೆ ನಿರುದ್ಯೋಗ ಸಮಸ್ಯೆ ನಿವಾರಿಸುವ ಘೋಷಣೆಗಳು ಮರುಕಳಿಸುತ್ತಲೇ ಇವೆ. ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ ₹10 ಲಕ್ಷದವರೆಗೆ ಸಾಲ ಸೌಲಭ್ಯ ಘೋಷಿಸಲಾಗಿದೆ. ಆದರೆ, ಇದು ಬರೀ ಸಾಲದ ಮೊತ್ತ ಹೆಚ್ಚಳ ಮಾಡಲಾಗಿದೆ ಅಷ್ಟೆ. ರೈತರಿಗೆ ಘೋಷಿಸಲಾಗಿರುವ ಕಿಸಾನ್ ಕ್ರೆಡಿರ್ಟ್ ಕಾರ್ಡ್ ನಿಂದ ಯಾವುದೇ ಉಪಯೋಗವಿಲ್ಲ ಎಂದು ಸಚಿವರು ಹೇಳಿದ್ದಾರೆ.
ಪ್ರಮುಖವಾಗಿ ಕೇಂದ್ರ ಬಜೆಟ್ ನಲ್ಲಿ ಲೋಕಸಭಾ ಚುನಾವಣೆ ವೇಳೆ ನಮ್ಮ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪ್ರಣಾಳಿಕೆಯ ಅಂಶಗಳೇ ಹೆಚ್ಚಿವೆ. ನಮ್ಮ ಪ್ರಣಾಳಿಕೆಯ ಅಂಶಗಳನ್ನು ಕೇಂದ್ರದ ಎನ್ ಡಿಎ ಸರ್ಕಾರ ಕಳುವು ಮಾಡಿದೆ. ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಂತಹ ತುರ್ತು ಸಮಸ್ಯೆಗಳಿಗೆ ಸ್ಪಂದನೆ ಇಲ್ಲ ಎಂದು ಅವರು ತಿಳಿಸಿದ್ದಾರೆ.