ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿ 1 ಟಿಎಂಸಿ ನೀರು ಬಿಡುಗಡೆಗೆ ಮನವಿ
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕಾಂಗ್ರೆಸ್ನ ಅಲ್ಲಮಪ್ರಭು ಪಾಟೀಲ್ ಅವರು ಕಲಬುರಗಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿ, ಭೀಮಾ ನದಿಯಲ್ಲಿ ನೀರಿಲ್ಲದ ಕಾರಣ ಕಲಬುರಗಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ನೀರು ತರಲಾಗುತ್ತಿದೆಯಾದರೂ, ಅದು ಬಳಕೆಗೆ ಯೋಗ್ಯವಾಗಿಲ್ಲ. ಹೀಗಾಗಿ ಕುಡಿಯುವ ನೀರಿಗಾಗಿ ಸೊಲ್ಲಾಪುರದಿಂದ ಭೀಮಾ ನದಿಗೆ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.ಇದಕ್ಕೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆಯಿದೆ. ಅದನ್ನು ನಿವಾರಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಈಗಾಗಲೇ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ಎರಡ್ಮೂರು ಬಾರಿ ಮಾತುಕತೆ ನಡೆಸಲಾಗಿದೆ. ಆದರೆ, ಮಹಾರಾಷ್ಟ್ರದಲ್ಲೂ ಬರವಿರುವ ಕಾರಣ ನೀರು ಬಿಡಲು ಒಪ್ಪುತ್ತಿಲ್ಲ. ಆದರೂ, ಕಲಬುರಗಿ ಜಿಲ್ಲೆಯ ಎಲ್ಲ ಶಾಸಕರನ್ನು ಕರೆದುಕೊಂಡು ಹೋಗಿ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.