ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಮಾಡುವ ಕುರಿತು ಶಾಸಕರ ಜೊತೆಗೆ ಮಾತುಕತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಮಾಡುವ ಕುರಿತು ಶಾಸಕರ ಜೊತೆಗೆ ಮಾತುಕತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಿಭಜನೆ ಕುರಿತಾಗಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಹ್ಲಾದ ಜೋಶಿಗೆ ನೈತಿಕತೆ ಇಲ್ಲ:
ನಾವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನಾವು ಬಡವರ ಪರವಾಗಿದ್ದೇವೆ ಎಂಬುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ. ಜೋಶಿ ಅವರು ಯಾರ ಪರವಾಗಿದ್ದಾರೆ? ಅವರೇನಾದರೂ ಬಡವರ ಪರವಾಗಿ ಕೆಲಸ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಚನ್ನರಾಜ ಹಟ್ಟಿಹೊಳಿ ಇನ್ನಿತರರು ಉಪಸ್ಥಿತರಿದ್ದರು.
ದರ್ಶನ್ಗೆ ರಾಜಾತಿಥ್ಯ ಸಾರ್ವಜನಿಕ ಹಿತಾಸಕ್ತಿ ವಿಷಯವಲ್ಲ:
ಬೆಳಗಾವಿ: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವ ವಿಚಾರ ಸಂಬಂಧ ಗೃಹ ಸಚಿವರೇ ಉತ್ತರ ನೀಡುತ್ತಾರೆ. ಎಲ್ಲದಕ್ಕೂ ನಾವು ಉತ್ತರಿಸಲಾಗದು. ಅದು ಸಾರ್ವಜನಿಕ ಹಿತಾಸಕ್ತಿ ವಿಷಯವೂ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಈಗಾಗಲೇ ಏಳು ಜನ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ರೀತಿಯ ಘಟನೆ ನಡೆಯಬಾರದು ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುತ್ತಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವ ಕೆಲಸವನ್ನು ಯಾರೂ ಮಾಡುತ್ತಿಲ್ಲ. ಶಾಸಕರು, ಸಚಿವರು, ಹೈಕಮಾಂಡ್ ಕೂಡ ಸಿಎಂ ಪರವಾಗಿ ನಿಂತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸಿಎಂ ಬೆನ್ನಿಗೆ ಜಾರಕಿಹೊಳಿ ಬ್ರದರ್ಸ್ ನಿಂತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹಳ ದಿನಗಳಿಂದ ಗೋಕಾಕ ಮತ್ತು ಮೂಡಲಗಿಯಲ್ಲಿ ಕೆಲ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯನವರು ಬರಬೇಕಿತ್ತು. ಅದಕ್ಕಾಗಿ ಬರುತ್ತಿದ್ದಾರಷ್ಟೇ. ಮುಡಾ ಹಗರಣಕ್ಕೂ ಮತ್ತು ಗೋಕಾಕ, ಮೂಡಲಗಿಗೆ ಬರುವುದಕ್ಕೆ ಏನೂ ಸಂಬಂಧವಿಲ್ಲ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.