ಕಬ್ಬಿಗೆ ಲಾಭದಾಯಕ ದರ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ: ರುದ್ರಪ್ಪ ಲಮಾಣಿ

KannadaprabhaNewsNetwork |  
Published : Sep 10, 2026, 01:45 AM IST
ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಕಬ್ಬು ಬೆಳೆಗಾರರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆ ಪರಿಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ರೈತರ ಬೇಡಿಕೆಗಳನ್ನು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಹಾವೇರಿ: ಕಬ್ಬು ಬೆಳೆಗಾರರಿಗೆ ಲಾಭದಾಯಕ ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳ ರಿಕವರಿ ಪ್ರಮಾಣದಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ರೈತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಕ್ಕರೆ ಮತ್ತು ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಜಿಲ್ಲೆಯ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆ ಪರಿಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ರೈತರ ಬೇಡಿಕೆಗಳನ್ನು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗಳು ನಿಗದಿಪಡಿಸುತ್ತಿರುವ ದರ ಹಾಗೂ ರಿಕವರಿ ಪ್ರಮಾಣದ ಕುರಿತು ರೈತರು ಸಭೆಗೆ ಮಾಹಿತಿ ನೀಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ಕೆಲವು ಕಾರ್ಖಾನೆಗಳಲ್ಲಿ ರಿಕವರಿ ಪ್ರಮಾಣ ಕಡಿಮೆಯಾಗಿದ್ದರಿಂದ ರೈತರಿಗೆ ನಿರೀಕ್ಷಿತ ದರ ದೊರೆಯಲಿಲ್ಲ. ಪ್ರಸಕ್ತ ಸಾಲಿನಲ್ಲಿ ರಿಕವರಿ ಪ್ರಮಾಣ ಹೆಚ್ಚಾಗಿದ್ದರೂ, ಅದಕ್ಕೆ ಅನುಗುಣವಾಗಿ ಕಬ್ಬಿಗೆ ದರ ನಿಗದಿಯಾಗಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದರು.

ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಮಾಣ ಮತ್ತು ಅದರಿಂದ ಉತ್ಪಾದನೆಯಾಗುವ ಸಕ್ಕರೆಯ ಪ್ರಮಾಣದ ಆಧಾರದ ಮೇಲೆ ರಿಕವರಿ ನಿಗದಿಯಾಗುತ್ತದೆ. ಆದರೆ, ರಿಕವರಿ ಪರೀಕ್ಷೆಯ ಪ್ರಕ್ರಿಯೆಯಲ್ಲಿ ರೈತರಿಗೆ ಮಾಹಿತಿ ಹಾಗೂ ಪರಿಶೀಲನೆಗೆ ಅವಕಾಶ ಕಲ್ಪಿಸುವ ಮೂಲಕ ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು ಎಂದು ರೈತರು ಒತ್ತಾಯಿಸಿದರು. ಹಾಗೆಯೇ ಸರ್ಕಾರದ ವತಿಯಿಂದ ರಿಕವರಿ ಪರೀಕ್ಷೆ ನಡೆಸಲು ಪ್ರಯೋಗಾಲಯ ಸ್ಥಾಪಿಸಬೇಕು ಎಂಬ ಬೇಡಿಕೆಯನ್ನೂ ಸಭೆಯ ಮುಂದಿಟ್ಟರು.

ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ರಿಕವರಿ ಆಧರಿತ ದರ ನಿಗದಿಯಲ್ಲಿ ವ್ಯತ್ಯಾಸವಿದೆ. ರಾಜ್ಯಾದ್ಯಂತ ಏಕರೂಪದ ಮಾನದಂಡಗಳನ್ನು ಅಳವಡಿಸಿಕೊಂಡು ಕಬ್ಬಿಗೆ ದರ ನಿಗದಿಪಡಿಸಬೇಕು ಮತ್ತು ಸಕ್ಕರೆ ಕಾರ್ಖಾನೆಗಳನ್ನು ಶೀಘ್ರವಾಗಿ ಆರಂಭಿಸಬೇಕು ಎಂಬ ಬೇಡಿಕೆಯನ್ನೂ ರೈತರು ಮುಂದಿಟ್ಟರು. ಸಕ್ಕರೆ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಬೇಗ ಕಾರ್ಯಾರಂಭಿಸಿದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆಸಿದ ಸಚಿವರು, ಕಳೆದ ಸಾಲಿನ ಕಬ್ಬಿನ ಪಾವತಿ, ಕಾರ್ಖಾನೆಗಳಿಂದ ನೀಡಬೇಕಿರುವ ಮೊತ್ತ ಹಾಗೂ ಹೆಚ್ಚುವರಿ ಪಾವತಿಗೆ ಸಂಬಂಧಿಸಿದ ವಿಷಯಗಳನ್ನು ಪುನಃ ಪರಿಶೀಲಿಸಲಾಗುವುದು. ರೈತರ ಪರವಾಗಿ ಮಂಡಿಸಬೇಕಾದ ಎಲ್ಲ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಕಬ್ಬಿನ ದರ ನಿಗದಿಗೆ ಕೇಂದ್ರ ಸರ್ಕಾರದ ಮಾನದಂಡಗಳಿದ್ದು, ರಾಜ್ಯ ಸರ್ಕಾರದ ಮಟ್ಟದಲ್ಲಿಯೂ ಸೂಕ್ತ ವೇದಿಕೆಯಲ್ಲಿ ಚರ್ಚೆ ನಡೆಸಲಾಗುವುದು. ರೈತರ ಬೇಡಿಕೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದರು.

ಸಭೆಯಲ್ಲಿ 2024- 25 ಹಾಗೂ 2025- 26ನೇ ಸಾಲಿನ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಕಬ್ಬು ನುರಿಸುವ ಪ್ರಮಾಣ, ರಿಕವರಿ ಹಾಗೂ ದರಗಳ ವಿವರಗಳನ್ನು ಒಳಗೊಂಡ ದಾಖಲೆಗಳನ್ನು ಪರಿಶೀಲಿಸಲಾಯಿತು.

ಇದೇ ಸಂದರ್ಭದಲ್ಲಿ ಸಚಿವರು ರೈತರ ಪ್ರಮುಖ ಬೇಡಿಕೆಗಳಾದ ಕಬ್ಬಿಗೆ ಲಾಭದಾಯಕ ದರ, ರಿಕವರಿ ಪ್ರಮಾಣದಲ್ಲಿ ಪಾರದರ್ಶಕತೆ, ಏಕರೂಪದ ದರ ನಿಗದಿ ಹಾಗೂ ಕಾರ್ಖಾನೆಗಳ ಶೀಘ್ರ ಕಾರ್ಯಾರಂಭ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಆಹಾರ ಇಲಾಖೆಯ ಉಪನಿರ್ದೇಶಕ ಡಿ.ಜೆ. ಮಂಜುನಾಥ, ರೈತ ಮುಖಂಡರು, ಕಬ್ಬು ಬೆಳೆಗಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುಮತಿ ಇಲ್ಲದೆ ನಡೆಸಿದ್ದ ಜಾನಪದ ವಿವಿ 8 ಪಿಜಿ ಕೋರ್ಸ್ ರದ್ದು!
ನಿಸ್ವಾರ್ಥ ಸೇವೆ ಸಲ್ಲಿಸುವವರಿಗೆ ಪ್ರೋತ್ಸಾಹ ನೀಡುವುದು ಅಗತ್ಯ: ಸಚಿವ ರುದ್ರಪ್ಪ ಲಮಾಣಿ