ನಗರಸಭೆ ಸದಸ್ಯರ ಅನರ್ಹತೆ ಪ್ರಕರಣ: ಸುಪ್ರೀಂ ಕೋರ್ಟ್ ತಡೆ

KannadaprabhaNewsNetwork |  
Published : May 14, 2026, 01:15 AM IST
ಗದಗ- ಬೆಟಗೇರಿ ನಗರಸಭೆ. | Kannada Prabha

ಸಾರಾಂಶ

ಹೈಕೋರ್ಟ್ ದ್ವಿಸದಸ್ಯ ಪೀಠದ ಸೂಚನೆಯಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು, ಮೂವರು ಸದಸ್ಯರಿಗೆ ಮತ್ತೊಮ್ಮೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಗದಗ: ಗದಗ- ಬೆಟಗೇರಿ ನಗರಸಭೆಯ ಮೂವರು ಸದಸ್ಯರ ಅನರ್ಹತೆಗೆ ಸಂಬಂಧಿಸಿದಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ನಡೆಸಬೇಕಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಬಿಜೆಪಿ ಸದಸ್ಯರ ಸದಸ್ಯತ್ವ ಮುಂದುವರಿಯಲಿದೆ.

ನಗರಸಭೆ ಸದಸ್ಯರಾದ ಉಷಾ ದಾಸರ, ಅನಿಲ್ ಅಬ್ಬಿಗೇರಿ ಮತ್ತು ಗೂಳಪ್ಪ ಮುಶಿಗೇರಿ ಅವರ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಪ್ರಾದೇಶಿಕ ಆಯುಕ್ತರು ಮತ್ತೊಮ್ಮೆ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಕಳೆದ ಏ. 29ರಂದು ಆದೇಶ ನೀಡಿತ್ತು.

ಹೈಕೋರ್ಟ್ ದ್ವಿಸದಸ್ಯ ಪೀಠದ ಸೂಚನೆಯಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು, ಮೂವರು ಸದಸ್ಯರಿಗೆ ಮತ್ತೊಮ್ಮೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಪ್ರಾದೇಶಿಕ ಆಯುಕ್ತರು ವಿಚಾರಣೆಗೆ ಹಾಜರಾಗುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಮೂವರು ಸದಸ್ಯರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯಿ ಅವರಿದ್ದ ಪೀಠ, ಹೈಕೋರ್ಟ್ ದ್ವಿಸದಸ್ಯ ಪೀಠದ ಆದೇಶ ಹಾಗೂ ಅದರ ಅಡಿಯಲ್ಲಿ ನಡೆಯುತ್ತಿರುವ ಎಲ್ಲಾ ನಡವಳಿಕೆಗಳಿಗೆ ಬುಧವಾರ ತಡೆ ನೀಡಿದೆ.

ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆ, ಸದಸ್ಯ ಗೂಳಪ್ಪ ಮುಶಿಗೇರಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ಎಲ್ಲ ನಡವಳಿಕೆಗಳಿಗೆ ತಡೆ ನೀಡಿರುವುದರಿಂದ, ಪ್ರಾದೇಶಿಕ ಆಯುಕ್ತರ ಮುಂದೆ ನಡೆಯುತ್ತಿರುವ ವಿಚಾರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಮಹತ್ವದ ಬೆಳವಣಿಗೆಯಿಂದಾಗಿ ಮೂವರೂ ಸದಸ್ಯರು ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದು, ಸುಪ್ರೀಂ ಕೋರ್ಟ್ ಈಗಾಗಲೇ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯು ನಾಲ್ಕು ವಾರಗಳ ನಂತರ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ: ಗಡ್ಡಿ- ಬಂಡ್ರಾಳ್ ಗ್ರಾಮಸ್ಥರ ಪ್ರತಿಭಟನೆ
ಕಾಳನದಿ ದಡದಲ್ಲಿ ಮರಿ ಕಾವಲು ಕಾಯುತ್ತಿರುವ ಮೊಸಳೆಯಮ್ಮ