ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ಗಳನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿತರಿಸಿದರು.
ಪಟ್ಟಣದ ತಾಲೂಕು ಕಚೇರಿಯ ಸಭಾ ಭವನದಲ್ಲಿ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕಾರ್ಮಿಕ ಇಲಾಖೆ ಲ್ಯಾಪ್ಟಾಪ್ ನೀಡಿದೆ ಎಂದರು. ವಿದ್ಯಾರ್ಥಿಗಳು ಇದನ್ನು ಉನ್ನತ ಓದಿಗೆ ಅನುಕೂಲ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ನೀಡಿದರು.ಕಾರ್ಮಿಕರ ಮಕ್ಕಳೂ ಓದಿನಿಂದ ವಂಚಿತರಾಗಬಾರದು ಎಂದು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಶೈಕ್ಷಣಿಕವಾಗಿ ಸ್ಪೂರ್ತಿ ತುಂಬಿಸಲು ಲ್ಯಾಪ್ ಟಾಪ್ ನೀಡುವುದು ಜಾರಿಯಲ್ಲಿದೆ ಎಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಸವಿತ ಮಾತನಾಡಿ ಕೂಲಿ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿದ್ಯಾರ್ಥಿಗಳ ವೇತನ, ಮೊದಲ ಎರಡು ಮದುವೆಗೆ ಸಹಾಯ ಧನ, ಉಚಿತ ಬಸ್ ಪಾಸ್ ಜೊತೆಗೆ ಪ್ರತಿಭಾವಂತ ಮಕ್ಕಳಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ ಎಂದರು.
ಸರ್ಕಾರದ ಯೋಜನೆ ಪಡೆಯಲು ಅನರ್ಹರು ಕಾರ್ಮಿಕರ ಕಾರ್ಡ್ ಪಡೆದಿದ್ದಾರೆ.ಕಾರ್ಮಿಕ ಇಲಾಖೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹಲವು ಸೌಲಭ್ಯ ಸಿಗುತ್ತಿವೆ ಕಾರ್ಮಿಕರು ಮದ್ಯವರ್ತಿಗಳ ಬಳಿ ಹೋಗದೆ ಕಾರ್ಮಿಕ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ ಎಂದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಕಾರ್ಮಿಕ ನಿರೀಕ್ಷಕ ನಾರಾಯಣ ಮೂರ್ತಿ ಹಾಗೂ ಕಾರ್ಮಿಕರು ಇದ್ದರು.