ಹನಕೆರೆಯಲ್ಲಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

KannadaprabhaNewsNetwork | Published : Jun 3, 2025 12:28 AM
ವಿದ್ಯಾರ್ಥಿಗಳು ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು. ಸರ್ವರಿಗೂ ಶಿಕ್ಷಣ ದೊರೆಯುವಂತೆ ಮಾಡುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಸರ್ಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸದೊಂದಿಗೆ ಉನ್ನತ ಸ್ಥಾನ ಅಲಂಕರಿಸಬೇಕು ಎಂದು ಹನಕೆರೆ ರೈತರ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಚ್.ಪಿ.ರಾಜಣ್ಣ ಹೇಳಿದರು.

ತಾಲೂಕಿನ ಹನಕೆರೆ ರೈತರ ಶಿಕ್ಷಣ ಸಂಸ್ಥೆಯ ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳಿಗೆ ಎಚ್.ಪಿ.ರಾಜಣ್ಣ ಅವರು ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿ, ಹಣ, ಅಂತಸ್ತು ಕದಿಯಬಹುದು. ಆದರೆ, ವಿದ್ಯೆ ಕದಿಯಲಾರದ ಸಂಪತ್ತು. ಆದ್ದರಿಂದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಶಾಲೆಗೆ ಒಳ್ಳೆಯ ಹೆಸರು ತರಬೇಕು ಎಂದರು.

ಹನಕೆರೆ ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಊಟ, ಪುಸ್ತಕ, ಶುಲ್ಕ ಎಲ್ಲವನ್ನೂ ಕೊಡುತ್ತಿದ್ದರೂ ಪೋಷಕರು ಕಾನ್ವೆಂಟ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ರೈತರ ಶಿಕ್ಷಣ ಸಂಸ್ಥೆಗೆ ಸೇರಿಸುವಂತೆ ಸಲಹೆ ನೀಡಿದರು.

ವಿದ್ಯಾರ್ಥಿಗಳು ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು. ಸರ್ವರಿಗೂ ಶಿಕ್ಷಣ ದೊರೆಯುವಂತೆ ಮಾಡುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಸರ್ಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಆದ್ದರಿಂದ ಇಂದಿನ ಶೈಕ್ಷಣಿಕ ವರ್ಷವು ವಿದ್ಯಾರ್ಥಿಗಳಿಗೆ ಉತ್ತಮವಾಗಿರಲಿ ಎಂದು ಆಶಿಸಿದರು.

ರೈತರ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶಿವಪ್ಪ, ಮುಖ್ಯ ಶಿಕ್ಷಕ ಕೃಷ್ಣ, ಪುಷ್ಪಲತಾ ಸೇರಿದಂತೆ ಇತರರಿದ್ದರು.

ನಾಳೆ ನಾಲ್ವಡಿ ಜಯಂತಿ, ಜೂ.27ರಂದು ಕೆಂಪೇಗೌಡರ ಜಯಂತಿಗೆ ಸಿದ್ಧತೆ

ಶ್ರೀರಂಗಪಟ್ಟಣ:

ಶ್ರೀರಂಗಪಟ್ಟಣದಲ್ಲಿ ಜೂ.4ರಂದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಹಾಗೂ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗಾಗಿ ಪೂರ್ವ ಸಿದ್ಧತೆಗಳ ಸಭೆ ನಡೆಯಿತು.

ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ಒಕ್ಕಲಿಗ ಸಮಾದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿ ಸಲಹೆ ಸೂಚನೆಗಳ ನೀಡಿದರು.

ಜೂನ್ 4ರ ನಾಲ್ವಡಿ ಕೃಷ್ಣ ರಾಜ ಒಡೆಯರ್ ಜಯಂತಿಯನ್ನು ತಹಸೀಲ್ದಾರ್ ಕಚೇರಿಯಲ್ಲಿ ಅದ್ಧೂರಿಯಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ನಂತರ ನಾಡ ಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ಮತ್ತೊಂದು ಬಾರಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ಕರೆದು ಚರ್ಚೆ ಮಾಡಲು ಸಭೆಯಲ್ಲಿ ತಿಳಿಸಲಾಯಿತು.

ಸಭೆಯಲ್ಲಿ ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್. ದಿನೇಶ್, ಸದಸ್ಯ ಕೃಷ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಸಂದೇಶ್, ಕರವೇ ಶಂಕರ್, ಒಕ್ಕಲಿಗ ಮುಖಂಡರಾದ ಗೌಡಹಳ್ಳಿ ದೇವರಾಜು, ಸ್ವಾಮೀಗೌಡ, ಪುರುಷೋತ್ತಮ, ಎಂ.ಸುರೇಶ್, ದರಸಗುಪ್ಪೆ ಮಂಜುನಾಥ್, ಮರಳಗಾಲ ಗುರು, ಸುಧಾಕರ್, ಡಿಎಸ್‌ಎಸ್ ಮುಖಂಡ ರವಿಚಂದ್ರ, ಸುರೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.