ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಜಿಲ್ಲಾಧಿಕಾರಿ ಮನವಿ

KannadaprabhaNewsNetwork |  
Published : Nov 14, 2024, 12:47 AM IST
13ಕೆಎಂಎನ್‌ಡಿ-7ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಮಾತನಾಡಿದರು.  | Kannada Prabha

ಸಾರಾಂಶ

ಸರ್ಕಾರಿ ನೌಕರರುಗಳಲ್ಲದೇ, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ಸಂಬಳವನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಮಾತನಾಡಿದರು. ಒಂದು ದಿನದ ಸಂಬಳ ನೀಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಒತ್ತಾಯವಿಲ್ಲ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರೀತಿಪೂರ್ವಕವಾಗಿ ನೀಡುವಂತೆ ಮನವಿ ಮಾಡಿದರು. ಸರ್ಕಾರಿ ನೌಕರರುಗಳಲ್ಲದೇ, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ ಎಂದರು.

ಸಭೆಯಲ್ಲಿ ಪ್ರತಿಯೊಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನವು ಕೇವಲ ವೈಯಕ್ತಿಕ ಹಬ್ಬವಾಗಿರದೆ, ಕನ್ನಡದ ಐಕ್ಯತೆಯನ್ನು ಸಾರುವ, ಪ್ರತಿಬಿಂಬಿಸುವ ಪ್ರತಿಯೊಬ್ಬ ಕನ್ನಡಿಗರ ಮನೆಯ ಹಬ್ಬವಾಗಿದೆ. ಸಾರ್ವಜನಿಕರು, ಎಲ್ಲಾ ಸರ್ಕಾರಿ ನೌಕರರು ಕೂಡ ತಮ್ಮ ಮನೆಯ ಹಬ್ಬವೆಂದು ಭಾವಿಸಿ ಸಂಭ್ರಮ, ಸಡಗರದಿಂದ ಆಚರಿಸೋಣ ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರುಗಳಲ್ಲಿ ವಿವಿಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ 10 ಮಂದಿ ಕನ್ನಡಿಗರಿಗೆ ಸನ್ಮಾನ ಮಾಡುವ ಬಗ್ಗೆ ಹಾಗೂ ಸಮ್ಮೇಳನ ನಡೆಯುವ ದಿನಗಳಂದು ರಜೆ ನೀಡುವ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌, ಕಸಾಪ ಸಮ್ಮೇಳನದ ಸಂಚಾಲಕಿ ಡಾ ಮೀರಾಶಿವಲಿಂಗಯ್ಯ ಸೇರಿದಂತೆ ವಿವಿಧ ನೌಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?