ಕನ್ನಡಪ್ರಭ ವಾರ್ತೆ ಚಿತ್ತಾಪುರ
ಕಳೆದ ನಾಲ್ಕೈದು ತಿಂಗಳಿಂದ ರಾಜ್ಯದಲ್ಲಿ ಲೊಕಸಭೆ, ವಿಧಾನ ಪರಿಷತ್ ಚುನಾವಣೆ ನಡೆದ ಹಿನ್ನಲೆಯಲ್ಲಿ ಜಿಲ್ಲೆ ಮತ್ತು ತಾಲೂಕಿನ ಅಧಿಕಾರಿಗಳು ಚುನಾವಣೆ ಪ್ರಕ್ರೀಯೆಯಲ್ಲಿ ಪಾಲ್ಗೊಂಡಿದ್ದರಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗಿದ್ದವು. ಈಗ ಚುನಾವಣೆಗಳು ಮುಗಿದಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ತಾಲೂಕು ಕೇಂದ್ರಕ್ಕೆ ಆಗಮಿಸಿ ಅಲ್ಲಿನ ಅಡಳಿತಕ್ಕೆ ವೇಗ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಫೌಜಿಯ ತರನ್ನುಮ್ ಹೇಳಿದರು.ಪಟ್ಟಣದಲ್ಲಿ ಗುರುವಾರ ವಸತಿ ನಿಲಯಗಳು, ಶಾಲೆ, ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಸರ್ಕಾರವು ಹಲವಾರು ಯೊಜನೆಗಳನ್ನು ಜಾರಿಗೆ ತಂದಿದ್ದು ಅವುಗಳು ಜನರಿಗೆ ತಲುಪುತ್ತಿವೆಯೇ, ವಸತಿ ನಿಲಯದಲ್ಲಿ, ಶಾಲೆಗಳಲ್ಲಿ ಮಕ್ಕಳಿಗೆ ಸೌಲಭ್ಯಗಳು ಸರಿಯಾಗಿ ಸಿಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲನೆ ಮಾಡಿ ವಿದ್ಯಾರ್ಥಿಗಳಿಗೆ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದರು.ಹಿಂದುಳಿದ ವರ್ಗ ಇಲಾಖೆಯ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಊಟದ ಪದಾರ್ಥ, ತರಕಾರಿ, ಅಡುಗೆ ಕೊಣೆ ಸ್ವಚ್ಛತೆ, ಕುಡಿವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳಿ ವಸತಿ ನಿಲಯದಲ್ಲಿನ ಸೌಲಭ್ಯಗಳು ದೊರಕುತ್ತಿರುವ ಹಾಗೂ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಹರಪೇಠ ತಾಂಡಾ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಕಲಿಕಾ ಬೋಧನೆಯನ್ನು ಪರಿಶೀಲನೆ ಮಾಡಿ ಮಕ್ಕಳಿಂದ ಕಲಿಕಾ ಮಾಹಿತಿ ಪಡೆದರು ಮಕ್ಕಳು ಸಂವಿಧಾನ ಓದು ಪೀಠಿಕೆಯನ್ನು ಹೇಳುವುದು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಪೊಲಿಸ್ ವರಿಷ್ಠಾದಿಕಾರಿ, ಜಿಪಂ ಸಿಇಓ, ಪ್ರೋಬಷನರಿ ಐಎಎಸ್ ಅಧಿಕಾರಿ, ಸೇಡಂ ಸಹಾಯಕ ಆಯಕ್ತರು, ಶಹಬಾದ ಡಿವೈಎಸ್ಪಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಭೇಟಿ ವೇಳೆ ಉಪಸ್ಥಿತರಿದ್ದರು.