ಅಧಿಕಾರಿಗಳು, ಜನಪ್ರತಿನಿಧಿಗಳ ಮೇಲೆ ಸ್ಥಳೀಯರ ತೀವ್ರ ಆಕ್ರೋಶ । ಸಂತ್ರಸ್ತ ಬಡ ಕುಟುಂಬಗಳಿಗೆ ಜಮೀನು ಹಂಚಿಕೆಗೆ ಸಚಿವರ ಸೂಚನೆ
ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ಆನೆ ದಾಳಿಯಿಂದ ಮೃತ ವಸಂತರವರ ನಿವಾಸಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಶನಿವಾರ ಅಧಿಕಾರಿಗಳೊಂದಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ವಸಂತರವರ ಮನೆಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಶನಿವಾರ ಭೇಟಿ ನೀಡಿದರು. ಶುಕ್ರವಾರ ಮೃತ ವಸಂತರವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗಿರದ ಹಿನ್ನೆಲೆಯಲ್ಲಿ ಬಿಕ್ಕೋಡು-ಕೈಮರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಉಸ್ತುವಾರಿ ಹಾಗೂ ಅರಣ್ಯ ಸಚಿವರು ಬರುವವರೆಗೂ ಶವ ಎತ್ತಲು ಬಿಡುವುದಿಲ್ಲ ಎಂದು ಸಾರ್ವಜನಿಕರು ಬಿಗಿಪಟ್ಟು ಹಿಡಿದಿದ್ದರು. ಜಿಲ್ಲಾಧಿಕಾರಿ, ಶಾಸಕರು ಗ್ರಾಮಸ್ಥರ ಮನವೊಲಿಸಿದ್ದರಿಂದ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಶನಿವಾರ ಬೆಳಿಗ್ಗೆಯೆ ಮತ್ತಾವರ ಗ್ರಾಮಕ್ಕೆ ಆಗಮಿಸಿ ಸಾರ್ವಜನಿಕರು ಹಾಗೂ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದರು.ಆನೆ ಬಹಳ ಸೂಕ್ಷ್ಮ ಪ್ರಾಣಿಯಾಗಿರುವುದರಿಂದ ಮನೆ ಬಳಿಯೆ ಬಂದು ಸದ್ದು ಮಾಡದೆ ದಾಳಿ ಮಾಡುತ್ತಿದೆ. ಆದ್ದರಿಂದ ಎಲ್ಲ ಕಾಡಾನೆಗಳನ್ನು ಬೇರೆಡೆಗೆ ಶಾಶ್ವತವಾಗಿ ಸ್ಥಳಾಂತರ ಮಾಡಬೇಕು. ವಸಂತರವರಿಗೆ ಪತ್ನಿ, 2 ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗನಿದ್ದು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹಾಗಾಗಿ ಈ ಬಡ ಕುಟುಂಬಕ್ಕೆ ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು, ಜಿಲ್ಲೆಯಾದ್ಯಂತ ಆನೆ ದಾಳಿಯಿಂದ ಮೃತಪಟ್ಟಂತಹವರು ಜಮೀನು ರಹಿತರಾಗಿದ್ದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ದುರ್ಘಟನೆಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರಿ ಭೂಮಿಯನ್ನು ಗುರುತಿಸಿ ನೊಂದ ಬಡ ಕುಟುಂಬಗಳಿಗೆ ಹಂಚಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.
ಬೇಲೂರಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ವಸಂತ್ರವರ ಮನೆಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಭೇಟಿ ನೀಡಿದ್ದರು.