ಶಿವಮೊಗ್ಗ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಶಿವಮೊಗ್ಗ ಜಿಲ್ಲಾಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಜ.21ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರಿಕ ಇಲಾಖೆ, ಇಂಧನ ಇಲಾಖೆ, ಸಾರಿಗೆ ಇಲಾಖೆ, ಉದ್ಯೋಗ ವಿನಿಮಯ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ-ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರ ಸಹಯೋಗದಲ್ಲಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಪ್ರತಿ ತಾಲೂಕುಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಫಲಾನುಭವಿಗಳೊಂದಿಗೆ ಸಂವಾದ ಹಾಗೂ ಯಶೋಗಾಥೆಗಳ ಪ್ರದರ್ಶನವಿರುತ್ತದೆ ಎಂದರು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನೆರವೇರಿಸುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಉಪಸ್ಥಿತರಿರುವರು ಎಂದು ತಿಳಿಸಿದರು. ಶಿವಮೊಗ್ಗ ಶಾಸಕ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕು ಸಮಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಅವರು ಮಾಹಿತಿ ನೀಡಿದರು.ಜ.21 ರಂದು ಬೆಳಗ್ಗೆ 10ಕ್ಕೆ ಗೋಪಿ ವೃತ್ತದಿಂದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ ಆರಂಭಗೊಂಡು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರ ತಲುಪಲಿದೆ ಎಂದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆಯು ಶೇ.98.6 ರಷ್ಟು ಸಾಧನೆ ಮಾಡಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಗ್ಯಾರಂಟಿ ಯೋಜನೆಗಳ ಮೂಲಕ ಸರಾಸರಿ 10 ಸಾವಿರ ರು. ಮೊತ್ತ ತಲುಪುತ್ತಿದ್ದು, ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ. ಗ್ಯಾರಂಟಿ ಯೋಜನೆಗಳ ಯಶಸ್ಸು, ಯೋಜನೆಗಳ ಕುರಿತಾದ ಯಶೋಗಾಥೆ ಮತ್ತು ಕುಂದುಕೊರತೆಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಗುವುದು ಎಂದರು. ಗೃಹಲಕ್ಷ್ಮ್ಛೀ ಯೋಜನೆಯಡಿ 2023ರ ಆಗಸ್ಟ್ನಿಂದ 2025ರ ಅಕ್ಟೋಬರ್ವರೆಗೆ ಒಟ್ಟು 388029 ಫಲಾನುಭವಿಗಳಿಗೆ 1805.56 ಕೋಟಿ ರು. ಮೊತ್ತವನ್ನು ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 482276 ಫಲಾನುಭವಿಗಳಿಗೆ 588.44 ಕೋಟಿ ರು. ಮೊತ್ತ ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2023 ರ ಜುಲೈನಿಂದ 2024ರ ಡಿಸೆಂಬರ್ವರೆಗೆ 2,23,13,229 ಫಲಾನುಭವಿಗಳಿಗೆ 360.55 ಕೋಟಿ ರು. ಪಾವತಿಸಲಾಗಿದೆ. ಯುವ ನಿಧಿ ಯೋಜನೆಯಡಿ 2023 ರ ಡಿಸೆಂಬರ್ ನಿಂದ 2025ರ ಜುಲೈ ವರೆಗೆ 86910 ಫಲಾನುಭವಿಗಳಿಗೆ 24.41 ಕೋಟಿ ರು. ಪಾವತಿಸಲಾಗಿದೆ ಹಾಗೂ ಶಕ್ತಿ ಯೋಜನೆಯಡಿ 65007631 ಮಹಿಳಾ ಫಲಾನುಭವಿಗಳು ಉಚಿತ ಪ್ರಯಾಣ ಮಾಡಿದ್ದು 244.98 ಕೋಟಿ ರು. ಪಾವತಿಸಲಾಗಿದೆ. ಒಟ್ಟು ಪಂಚ ಗ್ಯಾರಂಟಿಗಳಿಗೆ ಜಿಲ್ಲೆಯಲ್ಲಿ 88278075 ಫಲಾನುಭವಿಗಳಿದ್ದು, 3023.95 ಕೋಟಿಯಷ್ಟು ಪಾವತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಶಿವಣ್ಣ, ಇಕ್ಕೇರಿ ರಮೇಶ್, ತಾಲೂಕು ಅಧ್ಯಕ್ಷ ಎಚ್.ಎಂ.ಮಧು, ಸದಸ್ಯರಾದ ಎಂ.ರಾಹುಲ್ ಪಾಲ್ಗೊಂಡಿದ್ದರು.