ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ನ.೨೭,೨೮ ರಂದು ಜಿಲ್ಲಾ ಮಟ್ಟದ ಪ್ರತಿಭಟನೆ

KannadaprabhaNewsNetwork |  
Published : Nov 26, 2025, 01:30 AM IST
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದೇಶ್ ನಾಗೇಂದ್ರ | Kannada Prabha

ಸಾರಾಂಶ

ಯಗಚಿ ಮತ್ತು ವಾಟೆಹೊಳೆ ಜಲಾಶಯಗಳ ನೀರು ಕಾಲುವೆಗಳ ಹೂಳು ತುಂಬಿಕೊಂಡಿರುವುದರಿಂದ ಕೃಷಿಭೂಮಿಗಳಿಗೆ ತಲುಪದೆ ರೈತರು ಸಂಕಷ್ಟದಲ್ಲಿದ್ದಾರೆ. ಕಾಲುವೆ ನವೀಕರಣಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ನವೆಂಬರ್ ೨೭ ಮತ್ತು ೨೮ರಂದು ಜಿಲ್ಲೆಯ ಬಿಜೆಪಿ ಮಂಡಲ ಮಟ್ಟದಲ್ಲಿ ಪ್ರತಿಭಟನೆಗಳು ಆರಂಭವಾಗಲಿದ್ದು, ಡಿಸೆಂಬರ್ ೨ರಂದು ರಾಜ್ಯದ ಎಲ್ಲಾ ಮಂಡಲಗಳು, ತಾಲೂಕು ಕೇಂದ್ರಗಳು ಹಾಗೂ ಜಿಲ್ಲಾ ಮುಖ್ಯಾಲಯಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ೨೭ ಮತ್ತು ೨೮ರಂದು ಜಿಲ್ಲೆಯ ಬಿಜೆಪಿ ಮಂಡಲ ಮಟ್ಟದಲ್ಲಿ ಪ್ರತಿಭಟನೆಗಳು ಆರಂಭವಾಗಲಿದ್ದು, ಡಿಸೆಂಬರ್ ೨ರಂದು ಜಿಲ್ಲೆಯ ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಸಮಗ್ರವಾಗಿ ಹೋರಾಟ ನಡೆಸಲಾಗುತ್ತದೆ. ಬೆಳಗಾವಿ ವಿಧಾನಮಂಡಲ ಅಧಿವೇಶನ ಡಿಸೆಂಬರ್ ೮ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಕೈಗೊಳ್ಳುವ ಪ್ರಶ್ನೆಯನ್ನೂ ಪಕ್ಷದ ರೈತ ಘಟಕ ಚರ್ಚೆ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಎಕರೆ ಕೃಷಿ ಭೂಮಿ ಹಾನಿಗೊಳಗಾಗಿದ್ದು, ಹಲವು ಬಾರಿ ಮನವಿ ಮಾಡಿದರೂ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಿದ್ದೇಶ್ ನಾಗೇಂದ್ರ ಆರೋಪಿಸಿದರು. ಹಾಸನ ಜಿಲ್ಲೆಯಲ್ಲೂ ಬಿಳಿ ಸುಳಿ ರೋಗದಿಂದ ಮೆಕ್ಕೆಜೋಳ ಬೆಳೆ ಹಾನಿಯಾಗಿದ್ದರೂ ಪರಿಹಾರ ವಿತರಣೆ ವಿಳಂಬವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಾದ್ಯಂತ ಕಬ್ಬು ಬೆಳೆಗಾರರು ಬೆಂಬಲ ದರ ಹೆಚ್ಚಳಕ್ಕಾಗಿ ಹೋರಾಟ ಮಾಡಿದ್ದರೂ, ಸಮರ್ಪಕ ದರ ನಿಗದಿಯಲ್ಲಿ ಸರ್ಕಾರ ವಿಫಲವಾಗಿದೆ. ಇದಕ್ಕೂ ವಿರೋಧವಾಗಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಡಿಸೆಂಬರ್ ೨ರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದ್ದು, ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಸಹ ಕರೆಯೊಡ್ಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸುವಂತೆ ಕೋರಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಯಾವುದೇ ನೇರ ನೆರವು ನೀಡಿಲ್ಲ ಎಂದು ಟೀಕಿಸಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಾರ್ಷಿಕ ?೪೦೦೦ ಪ್ರೋತ್ಸಾಹಧನ ನೀಡಲಾಗುತ್ತಿತ್ತು, ಆದರೆ ಈಗ ಅದು ಸ್ಥಗಿತಗೊಂಡಿದೆ ಎಂದರು.

ಭಾಗ್ಯ ಯೋಜನೆಗಳ ರಾಜಕಾರಣ ಮಾಡುತ್ತಿರುವ ಸರ್ಕಾರ ರೈತ ಪರ ನೀತಿಗಳನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಯಗಚಿ ಮತ್ತು ವಾಟೆಹೊಳೆ ಜಲಾಶಯಗಳ ನೀರು ಕಾಲುವೆಗಳ ಹೂಳು ತುಂಬಿಕೊಂಡಿರುವುದರಿಂದ ಕೃಷಿಭೂಮಿಗಳಿಗೆ ತಲುಪದೆ ರೈತರು ಸಂಕಷ್ಟದಲ್ಲಿದ್ದಾರೆ. ಕಾಲುವೆ ನವೀಕರಣಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಜೊತೆಗೆ ಯಗಚಿ ಜಲಾಶಯಕ್ಕಾಗಿ ಭೂಮಿ ನೀಡಿದವರಿಗೆ ಇನ್ನೂ ನೀಡಬೇಕಿರುವ ?೩೫೦ ಕೋಟಿ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಲು ಬೇಡಿಕೆ ಇಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಗಿರೀಶ್, ಬಿ.ಎಚ್. ನಾರಾಯಣಗೌಡ ಮತ್ತು ನಾಗೇಶ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!