ಹಾವೇರಿ: ಕಳೆದು ಹೋದ ಮೊಬೈಲ್ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸುವ ಕಾರ್ಯದಲ್ಲಿ ಹಾವೇರಿ ಜಿಲ್ಲೆ ದಕ್ಷಿಣ ಭಾರತದ ಜಿಲ್ಲೆಗಳ ಪೈಕಿ ಮೊದಲ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ತಿಳಿಸಿದರು.
ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ನಿರ್ವಹಿಸುವ ಸಿಇಐಆರ್ ಪೋರ್ಟಲ್ನಲ್ಲಿ ಮೊಬೈಲ್ ಕಳವು, ಬ್ಲಾಕ್, ಟ್ರೇಸ್ ಹಾಗೂ ಮರುಪಡೆಯುವಿಕೆ ಕುರಿತು ಜಿಲ್ಲಾವಾರು ಶ್ರೇಯಾಂಕ ನೀಡಲಾಗುತ್ತದೆ. ಈ ಶ್ರೇಯಾಂಕದಲ್ಲಿ ಹಾವೇರಿ ಜಿಲ್ಲೆ ದಕ್ಷಿಣ ಭಾರತದ ಜಿಲ್ಲೆಗಳ ಪೈಕಿ ಮೊದಲ ಸ್ಥಾನ ಪಡೆದಿದ್ದು, ಫೆಬ್ರವರಿಯಲ್ಲೇ ಈ ಸಾಧನೆಗೆ ಮಾನ್ಯತೆ ದೊರೆತಿದೆ ಎಂದು ಹೇಳಿದರು.
ಪ್ರಸ್ತುತ ಹಾವೇರಿ, ಶಿವಮೊಗ್ಗ, ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಿಗೆ ಕಾರ್ಯಾಚರಣೆಯನ್ನು ವಿಸ್ತರಿಸಲಾಗುವುದು. ಮೊಬೈಲ್ ಕಳುವಾದ ತಕ್ಷಣ ಸಿಇಐಆರ್ ಪೋರ್ಟಲ್ನಲ್ಲಿ ಐಎಂಇಐ ಸಂಖ್ಯೆಯನ್ನು ಬ್ಲಾಕ್ ಮಾಡಿಸಿದರೆ, ಬಳಿಕ ಅದರಲ್ಲಿ ಬೇರೆ ಸಿಮ್ ಕಾರ್ಡ್ ಬಳಸಿದಾಗ ಅದರ ಸ್ಥಳ ಮಾಹಿತಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಆದರೆ ಮೊಬೈಲ್ ಸಂಪೂರ್ಣವಾಗಿ ಟ್ರೇಸ್ ಮಾಡಿ ಮರುಪಡೆಯುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೂ ತೆರಳಿ ಮೊಬೈಲ್ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸುತ್ತಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕಳೆದುಹೋದ ವಸ್ತುಗಳನ್ನು ಮಾಲೀಕರಿಗೆ ಹಿಂದಿರುಗಿಸಲಾಗುತ್ತಿದೆ. ಅಪರಾಧ ಪ್ರಕರಣಗಳ ತನಿಖೆಯಲ್ಲಿ ಸಾಕ್ಷ್ಯ ಸಂಗ್ರಹ, ಆರೋಪಿಗಳ ಪತ್ತೆ ಹಾಗೂ ವಸ್ತುಗಳ ಮರುಪಡೆಯುವಿಕೆ ಅತ್ಯಂತ ಸವಾಲಿನ ಕೆಲಸವಾಗಿದೆ. ಆದರೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸಿ ಕೊಲೆ ಸೇರಿದಂತೆ ಗಂಭೀರ ಪ್ರಕರಣಗಳನ್ನು ಭೇದಿಸಿ ಕಳುವಾದ ವಸ್ತುಗಳನ್ನು ಯಶಸ್ವಿಯಾಗಿ ಮರುಪಡೆಯುತ್ತಿದ್ದಾರೆ ಎಂದು ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದರು.
₹2.29 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ..
ವಿವರ ಹೀಗಿದೆ: ಸುಮಾರು ₹8.68 ಲಕ್ಷ ಮೌಲ್ಯದ 16 ವಾಹನಗಳು, ₹63.20 ಲಕ್ಷ ನಗದು, ₹1.18 ಕೋಟಿ ಮೌಲ್ಯದ 1088.57 ಗ್ರಾಂ ಬಂಗಾರ, ₹34.57 ಲಕ್ಷ ಮೌಲ್ಯದ 894.73 ಗ್ರಾಂ ಬೆಳ್ಳಿ ಆಭರಣಗಳನ್ನು ಪತ್ತೆ ಮಾಡಲಾಗಿದೆ. ಇದೇ ಅವಧಿಯಲ್ಲಿ 2,527 ಮೊಬೈಲ್ಗಳನ್ನು ಬ್ಲಾಕ್ ಮಾಡಿದ್ದು, ಅವುಗಳಲ್ಲಿ 2,014 ಮೊಬೈಲ್ಗಳನ್ನು ಪತ್ತೆ ಮಾಡಿದ್ದೇವೆ. 2026 ಜು.8ರಿಂದ ಸ್ಪೇಶಲ್ ಡ್ರೈವ್ ಕಾರ್ಯಾಚರಣೆ ಮೂಲಕ 539 ಮೊಬೈಲ್ಗಳನ್ನು ಪತ್ತೆ ಮಾಡಿ ಅವುಗಳನ್ನು ನೈಜ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಸ್ವತ್ತು ಮರಳಿ ಪಡೆದವರು ಪೊಲೀಸರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.