ಹೊಸಪೇಟೆ: ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ತ್ವರಿತ ನ್ಯಾಯ ಒದಗಿಸಲು ಜಿಲ್ಲಾವಾರು ವಿಚಾರಣಾ ಸಭೆಗಳನ್ನು ನಡೆಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ವಿಜಯನಗರ ಜಿಲ್ಲೆಯ ಒಂಬತ್ತು ಪ್ರಕರಣಗಳನ್ನು ಈ ದಿನ ವಿಚಾರಣೆ ನಡೆಸಲಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು.
ತುಮಕೂರಿನ ಗೊಲ್ಲರಹಟ್ಟಿಯೊಂದರಲ್ಲಿ ಬಾಣಂತಿಯರನ್ನು ಮನೆಯೊಳಗೆ ಸೇರಿಸುತ್ತಿರಲಿಲ್ಲ. ಈ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಜಾಗೃತಿ ಕೂಡ ಮೂಡಿಸಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದು, ಆ ಮಹಿಳೆಗೆ ನ್ಯಾಯ ಒದಗಿಸಲಾಗಿದೆ. ಬೆಳಗಾವಿ, ಬಾಗಲಕೋಟಗಳಲ್ಲಿ ಭ್ರೂಣಹತ್ಯೆ ಪ್ರಕರಣಗಳು ಕಂಡು ಬಂದ ಬಳಿಕ ಸುಮೊಟೊ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಬಡವರಿಗೆ ನಿವೇಶನಗಳ ಹಕ್ಕುಪತ್ರ ಒದಗಿಸಲು ಕ್ರಮವಹಿಸಲಾಗಿದೆ.
ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮಾಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಸ್ ಪಾಸ್ ವಿತರಣಾ ಕೌಂಟರ್, ಸಹಾಯಕ ಸಂಚಾರ ನಿಯಂತ್ರಣಾಧಿಕಾರಿ ಕೊಠಡಿಗಳಿಗೂ ಭೇಟಿ ನೀಡಿ ಪರಿಶೀಲಿಸಲಾಗಿದೆ. ಎಲ್ಲೆಡೆ ಮೂಲಭೂತ ಸೌಕರ್ಯದ ಕೊರತೆ ಇದೆ. ಹಾಗಾಗಿ ಈ ಲೋಪದೋಷಗಳನ್ನುಸರಿಪಡಿಸಲು ಕೂಡ ಸೂಚಿಸಲಾಗಿದೆ ಎಂದರು.ನಗರದ ಹಾಸ್ಟೆಲ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಿಗೂ ಭೇಟಿ ನೀಡಲಾಗಿದ್ದು, ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಒಂಬತ್ತು ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ಪೊಲೀಸ್ ಇಲಾಖೆ, ಮೂರು ಸಿಡಿಪಿಒ ಇಲಾಖೆಗೆ ಸಂಬಂಧಿಸಿದ್ದವು. ಉಳಿದ ಪ್ರಕರಣಗಳು ಜಿಲ್ಲಾ ಕಂದಾಯ ಇಲಾಖೆಗೆ ಸಂಬಂಧಿಸಿದೆ. ಈ ಪ್ರಕರಣಗಳ ಕುರಿತು ಅಧಿಕಾರಿಗಳಿಂದ ವಿವರಣೆ ಕೇಳಲಾಗಿದೆ ಎಂದರು.