ಕನ್ನಡಪ್ರಭ ವಾರ್ತೆ ಬೆಂಗಳೂರು
ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ನೂತನ ನಾಯಕನ ಆಯ್ಕೆಗಾಗಿ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ಮಂಡಿಸಿದ ಈ ನಿರ್ಣಯಕ್ಕೆ ಸಭೆ ಒಕ್ಕೊರಲಿನ ಒಪ್ಪಿಗೆ ನೀಡಿತು.
ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ನಿರ್ಣಯದ ಜತೆಗೆ ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರನ್ನು ಶ್ಲಾಘಿಸುವ ಹಾಗೂ ಅವರ ಭವಿಷ್ಯದಲ್ಲೂ ಮಾರ್ಗದರ್ಶನವನ್ನು ಬೇಡುವ ನಿರ್ಣಯ ಸಹ ಅಂಗೀಕರಿಸಲಾಯಿತು.ಸುರ್ಜೇವಾಲ ಪ್ರಕ್ರಿಯೆಗೆ ಚಾಲನೆ:
ಜತೆಗೆ, ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯ ಮಂಡಿಸಿದರು. ಇದನ್ನು ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು. ಬಳಿಕ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೇವಾಲ ಸಭೆಯಲ್ಲಿ ಪ್ರಕಟಿಸಿದರು.
ವಿರಾಮದ ಅವಧಿಯಲ್ಲಿ ಸಿದ್ದರಾಮಯ್ಯ, ವೇಣುಗೋಪಾಲ್ ಮತ್ತು ಸುರ್ಜೇವಾಲ ಅವರು ಸಿಎಂ ಕೊಠಡಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಸಭೆಯ ನಿರ್ಣಯದ ಮಾಹಿತಿ ನೀಡಿದರು. ಸಭೆಯ ನಿರ್ಣಯ ಪರಿಗಣಿಸಿ ನೂತನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಸೂಚಿಸಿ ಸಭೆಯಲ್ಲಿ 2ನೇ ನಿರ್ಣಯ ಮಂಡಿಸಲು ಹೈಕಮಾಂಡ್ ನಾಯಕರು ಚರ್ಚಿಸಿ ನಿರ್ಧರಿಸಿದರು. ನಂತರ ಮತ್ತೆ ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರೂ ನಾಯಕರು ವಾಪಸಾದರು.