ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಕೇವಲ ಕನಸು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಹುದ್ದೆಯನ್ನು ಡಿಕೆಶಿಗೆ ಕಾಂಗ್ರೆಸ್ನಲ್ಲಿ ಯಾರು ಬಿಟ್ಟು ಕೊಡುತ್ತಾರೆ? ನಮ್ಮ ಕೈಯ್ಯಲ್ಲಿ ಏನೂ ಇಲ್ಲ. ಅದೆಲ್ಲವೂ ಆ ಭಗವಂತನ ಕೈಯ್ಯಲ್ಲಿದೆ ಎಂದು ಮೇಲೆ ಕೈ ತೋರಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ವಿಧಾನಸೌಧದಲ್ಲಿ ಮಧ್ಯವರ್ತಿಗಳ ಅವಶ್ಯಕತೆಯೂ ಇಲ್ಲ, ಸಚಿವರುಗಳೇ ಎಲ್ಲಾ ಶುರು ಮಾಡಿಕೊಂಡಿದ್ದಾರೆ. ಅವರೇ ಎಲ್ಲಾ ರೇಟ್ ಫಿಕ್ಸ್ ಮಾಡಿಕೊಂಡಿದ್ದಾರೆ. ಹಣ ಕೊಟ್ಟವರಿಗೆ ಮನೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪ ಸರಿಯಾಗಿಯೇ ಇದೆ ಎಂದು ಟೀಕಿಸಿದರು.ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಅಕ್ರಮಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಚಿವ ಎಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ. ಸರ್ಕಾರದ ಹಲವು ಇಲಾಖೆಗಳಲ್ಲಿ ಹಣ ಬಿಡುಗಡೆ ಆಗಲು ಶಾಸಕರೇ ಹಣ ಕೊಡಬೇಕು. ಕೆಲವರು ನಿಮ್ಮದೊಂದು ಲೆಟರ್ ಕೊಡಿ ದುಡ್ಡು ತಗೊಂಡು ಬರುತ್ತೇವೆ ಎಂದು ಹೇಳುತ್ತಾರೆ. ಶಾಸಕರ ಲೆಟರ್ಹೆಡ್ನಿಂದ ಮಧ್ಯವರ್ತಿಗಳು ದುಡ್ಡು ಕೊಟ್ಟು ಮನೆ ತರುತ್ತಾರೆ. ನನ್ನ ಬಳಿಯೂ ಮನೆ ತರಲು ಈ ಸರ್ಕಾರದಲ್ಲಿ ಅಷ್ಟು ಕೊಟ್ಟಿದ್ದೇವೆ ಎಂದು ಚರ್ಚೆ ಮಾಡುತ್ತಾರೆ ಎಂದರು.
ಜಿಲ್ಲೆಗೆ ಪ್ರಮುಖ ಕಾರ್ಖಾನೆ ತಂದು ಯುವಜನರಿಗೆ ಉದ್ಯೋಗ ಕೊಡಬೇಕೆಂಬುಂದು ನನ್ನ ಕನಸು. ಆದರೆ, ಈ ಸರ್ಕಾರದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಮೈಷುಗರ್ ಸ್ಕೂಲನ್ನು ಮಾದರಿ ಶಾಲೆ ಮಾಡಲು ನಾನು ತಯಾರಿದ್ದೇನೆ. ಈ ಬಗ್ಗೆ ಶಾಲೆಯ ಟ್ರಸ್ಟಿಗಳಿಗೆ ಹೇಳಿದ್ದೇನೆ. ಇಂತಹ ಆಸ್ತಿಯನ್ನು ಗುತ್ತಿಗೆ ಮೇಲೆ ಕೊಡುವುದು ಸರಿಯಲ್ಲ. ಇದು ಹಗಲು ದರೋಡೆ. ಮೈಷುಗರ್ ಶಾಲೆ ಅಭಿವೃದ್ಧಿಗೆ ₹25 ಕೋಟಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಅಷ್ಟು ಹಣ ಕೊಡಲು ತಯಾರಿದ್ದೇನೆ ಎಂದು ಹೇಳಿದರು.