ನರಗುಂದ: ಸರ್ಕಾರ ಬಿಡುಗಡೆ ಮಾಡಿರುವ ಬೆಳೆ ಹಾನಿ ಪರಿಹಾರವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಉಗ್ರ ಹೋರಾಟ ಮಾಡಲಾಗುವುದು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಎಚ್ಚರಿಸಿದ್ದಾರೆ.
ತಾಲೂಕಿನಲ್ಲಿ ಹಿಂದಿನ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಸಂಪೂರ್ಣ ಬರಗಾಲ ಬಿದ್ದು ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಬೆಳೆ ಹಾನಿ ಪರಿಹಾರವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವುದು ನೋವಿನ ಸಂಗತಿಯಾಗಿದೆ. ಸರ್ಕಾರ ಬೆಳೆ ಹಾನಿ ಪರಿಹಾರವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳದೆ ರೈತರಿಗೆ ನೀಡುವಂತೆ ಆದೇಶ ಮಾಡಬೇಕು. ಒಂದು ವೇಳೆ ಈ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಹನಮಂತ ಸರನಾಯ್ಕರ, ಮಲ್ಲೇಶಪ್ಪ ಅಣ್ಣಿಗೇರಿ, ಜಗನ್ನಾಥ ಮುಧೋಳೆ, ಯಲ್ಲಪ್ಪ ಚಲವಣ್ಣವರ, ಶಿವಪ್ಪ ಸಾತಣ್ಣವರ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಮುಂತಾದವರು ಇದ್ದರು.