ಸಚಿವ ಸಂಪುಟ ಸಭೆಯ ಶಿಷ್ಟಾಚಾರದಲ್ಲಿ ಲೋಪವಾಗದಿರಲಿ: ಸಚಿವ ಪ್ರಿಯಾಂಕ್ ಖರ್ಗೆ

KannadaprabhaNewsNetwork |  
Published : Sep 15, 2024, 01:46 AM IST
ಫೋಟೋ- ಮೀಟಿಂಗ್‌ ಕ್ಯಾಬಿನೆಟ | Kannada Prabha

ಸಾರಾಂಶ

ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು

ಕನ್ನಡಪ್ರಭ ವಾರ್ತೆ ಕಲಬುರಗಿ

ಕಲಬುರಗಿಯಲ್ಲಿ ಮಂಗಳವಾರ ಜರುಗುವ ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರು ಆಗಮಿಸುವ ಹಿನ್ನೆಲೆಯಲ್ಲಿ ಶಿಷ್ಟಾಚಾರದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶನಿವಾರ ಬೆಂಗಳೂರಿನಿಂದ ವಿಡಿಯೋ ಕಾನ್ಪೆರೆನ್ಸ್ ಮೂಲಕ ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟದ ಸದಸ್ಯರು ಅಲ್ಲದೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳು ಮತ್ತು ಮುಖ್ಯಸ್ಥರು ಆಗಮಿಸುವುದರಿಂದ ಎಲ್ಲರಿಗೂ ಶಿಷ್ಟಚಾರದಂತೆ ವಸತಿ, ಸಾರಿಗೆ, ಊಟೋಪಚಾರ ಕಲ್ಪಿಸಬೇಕು ಎಂದರು.

ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು. ರಸ್ತೆ ಗುಂಡಿ ಮುಚ್ಚಬೇಕು ಎಂದ ಅವರು ಸಿ.ಎಂ. ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಸಂಪುಟ ಸಭೆ ನಡೆಯುವ ಮಿನಿ ವಿಧಾನಸೌಧ ಮತ್ತು ಗಣ್ಯರು ತಂಗುವ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸೂಕ್ತ ಪೊಲೀಸ್ ಭದ್ರತೆಗೆ ಸಿಬ್ಬಂದಿ ನಿಯೋಜಿಸಬೇಕೆಂದರು.

ಸಚಿವ ಸಂಪುಟ ಸಭೆ ಯಶಸ್ಸಿಗೆ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಒಟ್ಟಾರೆ ಸಂಪುಟ ಸಭೆ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ಯಶಸ್ಸಿಗೆ ಎಲ್ಲಾ ಸಮಿತಿಯ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕೆಂದರು.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಮತ್ತು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರ ಮಾತನಾಡಿ, ಸಂಪುಟ ಸಭೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಉತ್ಸವ ವೇದಿಕೆಯಲ್ಲಿ ಜಿಲ್ಲೆ ಸೇರಿದಂತೆ ಪ್ರದೇಶದ ಸಾವಿರಾರು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿ.ಎಂ. ಅವರಿಂದ ಚಾಲನೆ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವಾರ್ ಸಿಂಗ್ ಮೀನಾ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಶಂಕರ, ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಡಿ.ಸಿ.ಎಫ್. ಸುಮಿತ್ ಪಾಟೀಲ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಜೆಸ್ಕಾಂ ಎಂ.ಡಿ. ರವೀಂದ್ರ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಖ-ದುಃಖಗಳು ಪುಣ್ಯ-ಪಾಪದ ಫಲ: ಸಿದ್ಧಾರೂಢ ಶರಣರು
30ಕ್ಕೆ ಒಂದು ದಿನದ ತಾಂತ್ರಿಕ ಕಾರ್ಯಾಗಾರ