ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಜನ್ ಭಾಗೀದಾರಿ-ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಅಭಿಯಾನದಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಾಹಿತಿ ಕೊರತೆಯಿಂದಾಗಿ ಸರ್ಕಾರದ ಸೌಲಭ್ಯಗಳು ಬುಡಕಟ್ಟು ಪರಿಶಿಷ್ಟ ಪಂಗಡದ ಜನರಿಗೆ ತಲುಪದೇ ಇರಬಾರದು. ಪ್ರತಿಯೊಂದು ಇಲಾಖೆಯೂ ಜವಾಬ್ದಾರಿಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳ ಪೂರ್ಣ ಮಾಹಿತಿ ಜನರಿಗೆ ಸಿಗುವಂತಾಗಲು ಇಲಾಖಾ ಮಟ್ಟದಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮ ಮಟ್ಟದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ಬುಡಕಟ್ಟು ಜನರಲ್ಲಿ ಕಂಡುಬರುವ ಸಿಕಲ್ ಸೆಲ್ ಅನೀಮಿಯಾ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಇದರೊಂದಿಗೆ ಪ್ರಮುಖವಾಗಿ ಪ್ರಧಾನಮಂತ್ರಿ ಜನಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಕಳೆದ ಬಾರಿ ಈ ಕಾರ್ಯಕ್ರಮವನ್ನು 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಏಳು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಶಿಕ್ಷಣ, ಆರೋಗ್ಯ, ಪಶುಸಂಗೋಪನೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸಿಗುವ ಸೌಲಭ್ಯಗಳು ಮತ್ತು ಯೋಜನೆಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನು ವಿವಿಧ ಇಲಾಖೆ ಅಧಿಕಾರಿಗಳು ಮಾಡಬೇಕಿದೆ ಎಂದರು.