ಜ್ವರ, ಶೀತ ಇದ್ದರೆ ಮಕ್ಕಳನ್ನು ಶಾಲೆಗೆ ಕಳಿಸಬೇಡಿ

KannadaprabhaNewsNetwork |  
Published : May 27, 2025, 01:45 AM IST
ದಿನೇಶ್ ಗುಂಡೂರಾವ್ | Kannada Prabha

ಸಾರಾಂಶ

ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ವಿಶೇಷವಾಗಿ ಮಕ್ಕಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಹೀಗಾಗಿ ಪೋಷಕರು ಜ್ವರ, ಶೀತ ಇರುವವರನ್ನು ಶಾಲೆಗೆ ಕಳುಹಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಅಂತಹ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಗಳು ರಜೆ ನೀಡುವಂತೆ ಅಧಿಕೃತವಾಗಿ ನಿರ್ದೇಶನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ್ಯಾದ್ಯಂತ ಪರೀಕ್ಷಾ ಕಿಟ್ ವಿತರಣೆ:

ಕೊರೋನಾ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಅವಲೋಕನ ಮಾಡುತ್ತಿದ್ದಾರೆ. ಕೊರೋನಾ ಪರೀಕ್ಷಾ ಕಿಟ್‌ಗಳನ್ನು ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಿದ್ದು, ಮಂಗಳವಾರದ ಒಳಗಾಗಿ ಹೊಸದಾಗಿ ಖರೀದಿಸಿರುವ 5,000 ಆರ್‌ಟಿ-ಪಿಸಿಆರ್‌ ಕಿಟ್‌ ಸಹ ಲಭ್ಯವಾಗಲಿದೆ. ಸದ್ಯಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆ ಇರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಉಸಿರಾಟ ಮತ್ತು ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ಹೇಳಿದರು.

ಮುನ್ನೆಚ್ಚರಿಕೆ ದೃಷ್ಟಿಯಿಂದ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಖರೀದಿಸಲು ಸೂಚನೆ ನೀಡಲಾಗಿದೆ. ಇದು ಕೋವಿಡ್ ಒಮೆಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನು ಹೊಂದಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡರೂ ಸಹ ಗಂಭೀರವಾಗಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸುವುದು ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವೆಂಟಿಲೇಟರ್‌ ಸೇರಿದಂತೆ ಎಲ್ಲ ಸಿದ್ಧತೆ:

ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಜತೆಗೆ ಪೂರ್ವ ತಯಾರಿಗಾಗಿ ಕೋವಿಡ್‌ ವಾರ್ಡ್‌ ಸಿದ್ಧತೆ ಮಾಡುತ್ತಿದ್ದೇವೆ. ಪ್ರಕರಣಗಳು ಹೆಚ್ಚಾದರೆ ಮಾತ್ರ ಕೋವಿಡ್‌ ವಾರ್ಡ್‌ ಕಾರ್ಯನಿರ್ವಹಣೆ ಮಾಡಲಿದೆ. ಭಾನುವಾರದವರೆಗೆ ವರದಿಯಾಗಿರುವ ಪ್ರಕರಣಗಳಲ್ಲಿ ಒಬ್ಬರು ಬಿಟ್ಟು ಉಳಿದೆಲ್ಲರೂ ಮನೆಯಲ್ಲೇ ಇದ್ದಾರೆ. ಹೀಗಾಗಿ ಆತಂಕ ಬೇಡ ಎಂದರು.

PREV

Recommended Stories

ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ನಿಂದ ರಸಪ್ರಶ್ನೆ ಸ್ಪರ್ಧೆ
ಕುತಂತ್ರ-ಅಸೂಯೆಯಿಂದ ಟನಲ್‌ ರಸ್ತೆಗೆ ಬಿಜೆಪಿ ವಿರೋಧ : ಡಿ.ಕೆ.ಸು