ಬಿಜೆಪಿ ನಾಯಕರನ್ನು ಬೈಯುತ್ತಲೇ ಏಕಾಏಕಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದರು. ಇಂತ ಸಮಯಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕರಾಗಿ, 2 ಬಾರಿ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿ ಆಗಿದ್ದರೂ ಬಿಜೆಪಿಗೆ ದ್ರೋಹ ಎಸಗಿ ಕಳೆದ ವರ್ಷ ಕಾಂಗ್ರೆಸ್ಗೆ ಬಂದರು. ಬಿಜೆಪಿ ನಾಯಕರನ್ನು ಬೈಯುತ್ತಲೇ ಏಕಾಏಕಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದರು. ಇಂತ ಸಮಯಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು.
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಡಗಾವಿ, ಹುಂಚನಹಟ್ಟಿ, ಪೀರಣವಾಡಿ, ಸಮರ್ಥ್ ನಗರದಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸಾಧನೆಯೂ ಇಲ್ಲದ, ಬೆಳಗಾವಿಗೆ ಸಂಬಂಧವೂ ಇಲ್ಲದ, ಬೆಳಗಾವಿಗೆ ನಿರಂತರ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಅವರನ್ನು ತಿರಸ್ಕರಿಸಿ ಸ್ಥಳೀಯ ಮನೆ ಮಗ ಮೃಣಾಲ್ ಹೆಬ್ಬಾಳಕರ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಮೃಣಾಲ್ ಹೆಬ್ಬಾಳ್ಕರ್ ಗೆದ್ದರೇ ಕ್ಷೇತ್ರದ ಮನೆ ಮಗನಾಗಿ ಕೆಲಸ ಮಾಡಲಿದ್ದಾನೆ. ನಿಮ್ಮ ಮಗನಿಗೆ ಮತ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕೋರಿದರು.
ದೀನ ದಲಿತರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಹಲವು ಯೋಜನೆಗಳನ್ನ ತಂದಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಮನೆಗೆ ಸರಾಸರಿ ₹4 ರಿಂದ ₹5 ಸಾವಿರ ತಲುಪುತ್ತಿದೆ. ಬಿಜೆಪಿ ಶ್ರೀಮಂತರ ಸಾಲಮನ್ನಾ ಮಾಡುವ ಮೂಲಕ ಶ್ರೀಮಂತರಿಗಷ್ಟೇ ಸೀಮಿತವಾಗಿದೆ ಎಂದು ಕಿಡಿಕಾರಿದರು.ಬಾಕ್ಸ್....
ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸ್ಥಳೀಯ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಢಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜೆ.ಪ್ರದೀಪ್ ಮೊದಲಾದವರು ಸಚಿವರಿಗೆ ಸಾಥ್ ನೀಡಿದರು.
ಕಾಂಗ್ರೆಸ್ ಪಕ್ಷದಿಂದ ಮಾತ್ರ ದೀನ ದಲಿತರ ಏಳಿಗೆ ಸಾಧ್ಯ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಕಾಂಗ್ರೆಸ್ನಿಂದ ಯೋಗ್ಯ ಅಭ್ಯರ್ಥಿ ಸ್ಪರ್ಧಿಸಿದ್ದು, ಈ ಬಾರಿ ಕಾಂಗ್ರೆಸ್ ಜಯಿಸಲು ಉತ್ತಮ ವಾತಾವರಣವಿದೆ.
-ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.