ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ-ರಾಣಿಬೆನ್ನೂರಲ್ಲಿ ಮನವಿ

KannadaprabhaNewsNetwork |  
Published : Aug 01, 2026, 03:30 AM IST
ರಾಣಿಬೆನ್ನೂರು ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಆಗ್ರಹಿಸಿ ಗ್ರೇಡ್-2 ತಹಸೀಲ್ದಾರ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಆಗ್ರಹಿಸಿ ಶುಕ್ರವಾರ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗ್ರೇಡ್-2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಆಗ್ರಹಿಸಿ ಶುಕ್ರವಾರ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗ್ರೇಡ್-2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಮಾತನಾಡಿ, ಕಾವೇರಿ ನೀರನ್ನು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರ್ಕಾರಕ್ಕೆ ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶ ಇದಾಗಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಕೆಆರ್‌ಎಸ್, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳವಳಕಾರಿ ಮಟ್ಟದಲ್ಲಿದೆ. ಈಗಿರುವ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನೇ ಸಂಪೂರ್ಣವಾಗಿ ಪೂರೈಸಲು ಸಾಕಾಗದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ನಾಲ್ಕೂವರೆ ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸುವುದು ವಾಸ್ತವ ಸ್ಥಿತಿಗೆ ಕಣ್ಣು ಮುಚ್ಚಿಕೊಂಡು ತೆಗೆದುಕೊಂಡ ನಿರ್ಧಾರವಾಗಿದೆ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ, ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದರ ಜೊತೆಗೆ ರಾಜ್ಯದ ರೈತರ ಬೆಳೆ ಹಾಗೂ ಜೀವನೋಪಾಯವನ್ನು ರಕ್ಷಿಸುವುದು ಕರ್ನಾಟಕ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದ ಜನರ ಅಗತ್ಯಗಳನ್ನು ಕಡೆಗಣಿಸಿ ನೀರು ಹರಿಸುವುದು ಯಾವುದೇ ದೃಷ್ಟಿಯಿಂದಲೂ ನ್ಯಾಯಸಮ್ಮತವಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ನು ಪಾಲಿಸಬಾರದು ಮತ್ತು ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುಗಡೆ ಮಾಡಬಾರದು ಎಂದರು

ಜಿಲ್ಲಾ ಗೌರವ ಉಪಾಧ್ಯಕ್ಷ ವಿ.ಎಸ್. ಹಿರೇಮಠ ಮಾತನಾಡಿ, ರಾಜ್ಯ ಸರ್ಕಾರ ತಕ್ಷಣವೇ ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಿ, ಕರ್ನಾಟಕದ ವಾಸ್ತವ ಜಲಸ್ಥಿತಿಯನ್ನು ಸಮಗ್ರವಾಗಿ ಮಂಡಿಸಬೇಕು. ಅಗತ್ಯವಿದ್ದರೆ ಮುಂದಿನ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡು ರಾಜ್ಯದ ಹಕ್ಕು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಬೇಕು. ಒಂದು ವೇಳೆ ಈ ಅವೈಜ್ಞಾನಿಕ ಆದೇಶವನ್ನು ಅನುಸರಿಸಿ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಮಾಡಿದರೆ, ಅದರ ವಿರುದ್ಧ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ತೀವ್ರ ಜನಾಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಗೆ ಸರ್ಕಾರವೇ ನೇರ ಹೊಣೆಗಾರವಾಗಲಿದೆ ಎಂದರು.

ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ, ರಾಜ್ಯ ಉಪಾಧ್ಯಕ್ಷ ಸಿದ್ಧಾರೂಢ ಗುರುಂ, ಮಲ್ಲಿಕಾರ್ಜುನ ಸಾವಕ್ಕಳವರ, ಪರಶುರಾಮ ಕುರುವತ್ತಿ, ಆನಂದ ಲಮಾಣಿ, ಗೋಪಿ ಕುಂದಾಪುರ, ಶಂಕರ ಹಳ್ಳಪ್ಪನವರ, ಮರಡೆಪ್ಪ ಚಳಗೇರಿ, ಭಾಷಾ ಹಂಪಪಟ್ಟಣ, ಕೃಷ್ಣ ವೇಷಗಾರ, ಶ್ರೀಕಾಂತಪ್ಪ ಕಡ್ಲಿಗೊಂದಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಅರಣ್ಯವಾಸಿಗಳ ಆಕ್ರೋಶ
ಜಾಲಿ ಯೋಗ ತರಬೇತಿ ಕೇಂದ್ರದಲ್ಲಿ ಗುರುಪೂರ್ಣಿಮೆ ಆಚರಣೆ