ಮೀನುಗಾರರ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಯಲ್ಲಿ 5 ಮಂದಿ ಮೀನುಗಾರರನ್ನು ಬಂಧಿಸಿರುವುದರ ಮತ್ತು ಮೀನುಗಾರರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವಿರುದ್ಧ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಮಲ್ಪೆ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ದಿನವಿಡೀ ಮಲ್ಪೆಯಲ್ಲಿ ಯಾವುದೇ ವ್ಯವಹಾರಗಳು ನಡೆಯಲಿಲ್ಲ.ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಈ ಘಟನೆಯನ್ನು ಪೊಲೀಸರೇ ರಾಜಿಯ ಮೂಲಕ ಇತ್ಯರ್ಥ ಮಾಡಿದ್ದರು. ಆದರೆ ನಂತರ ಮೀನುಗಾರರ ಮೇಲೆ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ. ಮೀನುಗಾರರು ಯಾರಿಗೂ ಅನ್ಯಾಯ ಮಾಡುವುದಿಲ್ಲ, ತಮಗೆ ಅನ್ಯಾಯವಾದರೇ ಬಿಡುವವರಲ್ಲ. ಪೊಲೀಸರಿಗೆ ಜೇನುಗೂಡಿಗೆ ಕೈ ಹಾಕಿದರೇ ಪರಿಣಾಮ ಏನಾಗುತ್ತದೆ ಎಂಬ ಕಲ್ಪನೆ ಇಲ್ಲ. ಜಾತಿ ನಿಂದನೆ ಸೆಕ್ಷನ್ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಲು ಇಲಾಖೆಗಳು ಸಿದ್ಧವಾಗಬೇಕು ಎಂದು ಎಚ್ಚರಿಕೆ ನೀಡಿದರು.ಮೀನುಗಾರರಿಗೆ ಅನ್ಯಾಯವಾಗಿದೆ. ಮೀನುಗಾರರ ಋಣ ನನ್ನ ಮೇಲಿದೆ. ಅವರಿಗೆ ನ್ಯಾಯ ಸಿಗುವಂತೆ ಮಾಡುವ ಮೂಲಕ ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ದಲಿತ ಕುಟುಂಬಗಳ ಉದ್ಧಾರ: ಪ್ರಮೋದ್ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಮಲ್ಪೆ ಬಂದರು ಲಕ್ಷಾಂತರ ಜನರಿಗೆ ಅನ್ನದ ಬಟ್ಟಲಾಗಿದೆ. ಇಲ್ಲಿ ನಡೆದ ಘಟನೆಯನ್ನು ವಿರೋಧಿಸುವ ದಲಿತ ನಾಯಕರ ಕುಟುಂಬಗಳು ಉದ್ಧಾರ ಆಗಿದ್ದು ಇದೇ ಮಲ್ಪೆ ಬಂದರಿನಿಂದ ಎಂಬುದನ್ನು ಮರೆಯಬಾರದು ಎಂದರು.ಈ ಜಿಲ್ಲೆಯಲ್ಲಿ ಅಣ್ಣಾಮಲೈಯಂತಹ ಅನೇಕ ದಕ್ಷ ಎಸ್ಪಿಗಳು ಕೆಲಸ ಮಾಡಿದ್ದಾರೆ. ಆದರೆ ಅವರೆಂದೂ ಮಾನವೀಯತೆ ಬಿಟ್ಟು ವರ್ತಿಸಿಲ್ಲ. ಆದರೆ ಅಮಾಯಕ ಮೀನುಗಾರ ಮಹಿಳೆಯನ್ನು ಬಂಧಿಸಿ ಪೌರುಷ ತೋರಿಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.ಮೀನುಗಾರಿಕೆ, ಬಂದರಿನ ಬಗ್ಗೆ ಏನೆಂದೇ ತಿಳಿಯದವರು ಉಸ್ತುವಾರಿ ಮಂತ್ರಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತುಕೊಂಡು ದಿಗ್ಭ್ರಮೆಯಾಗಿದೆ ಎಂದು ಸಿಎಂ ಹೇಳಿಕೆ ಕೊಡುತ್ತಾರೆ. ಆದರೆ ಸಿಎಂ ಅವರ ತವರೂರು ಮೈಸೂರಿನಲ್ಲಿ 300 ಮಂದಿ ಗುಂಪು ಸೇರಿ ಪೊಲೀಸ್ ಸ್ಟೇಷನ್ಗೆ ಬೆಂಕಿ ಹಾಕಿದಾಗ ದಿಗ್ಭ್ರಮೆ ಆಗಿಲ್ಲವಾ? ಎಂದು ಪ್ರಶ್ನಿಸಿದರು.ದಲಿತೆ ಎಂದು ತಿಳಿದಿರಲಿಲ್ಲ: ರಘುಪತಿ ಭಟ್
ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹಾಗೂ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪಿ.ಎ ಹೆಗಡೆ ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ, ಮೀನುಗಾರರು ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದು, ಮೀನುಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭರವಸೆಯನ್ನು ನೀಡಿದರು.