ಹಾವೇರಿ: ಉದ್ಯೋಗ ಮೇಳಗಳ ಮೂಲಕ ಅನೇಕ ಉದ್ಯೋಗಾವಕಾಶಗಳು ಯುವಕ, ಯುವತಿಯನ್ನು ಹುಡುಕಿಕೊಂಡು ಬರುತ್ತಿದ್ದು, ಇದರ ಸದ್ಬಳಕೆ ಪಡೆದು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದರು.ನಗರದ ಮುನ್ಸಿಪಲ್ ಪ್ರೌಢಶಾಲೆ ಆವರಣದಲ್ಲಿ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಶಿಕ್ಷಕ ಶಿಕ್ಷಕಿಯರ ನಿರಂತರ ಸಹಾಯವಾಣಿ ಶಿರಸಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದರು.ಈ ಮೊದಲು ಲಂಚ ತೆಗೆದುಕೊಂಡು ಉದ್ಯೋಗ ಕೊಡುತ್ತಿದ್ದರು. ಈಗ ಅಂತಹ ಕಾಲ ಇಲ್ಲ. ನಿಮ್ಮ ವಿದ್ಯಾಭ್ಯಾಸ, ತರಬೇತಿ, ಅರ್ಹತೆಗೆ ಅನುಗುಣವಾಗಿ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡು, ಉತ್ತಮವಾಗಿ ಕೆಲಸ ಮಾಡಿ. ಸರ್ಕಾರಿ ನೌಕರಿಯೇ ಬೇಕು ಎಂದು ಕಾಲಹರಣ ಮಾಡಬೇಡಿ. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಅಸಾಧ್ಯ. ಸಿಕ್ಕ ಖಾಸಗಿ ಉದ್ಯೋಗಕ್ಕೆ ಸೇರಿ ಸುಂದರವಾದ ಜೀವನ ನಡೆಸಬೇಕು ಎಂದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ಯುವನಿಧಿ ಯೋಜನೆ ಜಾರಿಗೊಳಿಸಿದೆ. ನಿರುದ್ಯೋಗಿಗಳು ಇಂತಹದ್ದೇ ಉದ್ಯೋಗ ಬೇಕು ಎಂದು ಸಮಯ ವ್ಯರ್ಥ ಮಾಡದೇ, ಸಿಕ್ಕ ಅವಕಾಶಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು, ಉನ್ನತ ಹುದ್ದೆ ಪಡೆಯಬೇಕು ಎಂದರು.
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ರೆಡ್ಡಿ ಜನಸಂಘದ ಸಹಯೋಗದಲ್ಲಿ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮೇ 10ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಜರುಗಲಿದೆ.
ಹೊಸಮಠದ ಬಸವಶಾಂತಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ ಪಾಲ್ಗೊಳ್ಳಲಿದ್ದಾರೆ. ಹಿರೇಕೆರೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಉಪನ್ಯಾಸಕ ಡಾ. ಕಾಂತೇಶರೆಡ್ಡಿ ಗೋಡಿಹಾಳ ಅವರು ಉಪನ್ಯಾಸಕರಾಗಿ ಭಾಗವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಹಾವೇರಿ ಜಿಲ್ಲಾ ರೆಡ್ಡಿ ಜನಸಂಘದ ಕಾರ್ಯದರ್ಶಿ ಜಿ.ವಿ. ದೊಡ್ಡಗೌಡ್ರ ಅವರು ಪಾಲ್ಗೊಳ್ಳಲಿದ್ದಾರೆ.