ಸೂಸಲವಾನಿಯಲ್ಲಿ ತಾಲೂಕು ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ
ದಲಿತ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ಡಿ.ಎಸ್.ಎಸ್ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.
ತಾಲೂಕಿನ ಸೂಸಲವಾನಿಯಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಸರ್ಕಾರ ದಲಿತ ಸಮುದಾಯದವರಿಗಾಗಿ ಹಲವಾರು ಸೌಲಭ್ಯ ನೀಡುತ್ತಿದೆ. ಇದನ್ನು ಉಪಯೋಗಿಸಿಕೊಳ್ಳಬೇಕು. ದಲಿತ ಸಮುದಾಯದವರು, ಬಡವರು, ಶೋಷಿತ ವರ್ಗದವರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಅವರಿಗೆ ಮೇಲ್ವರ್ಗದ ಜನರಂತೆ ಎಲ್ಲಾ ಸವಲತ್ತುಗಳು ದೊರಕುವಂತಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು. ಡಾ.ಅಂಬೇಡ್ಕರ್ ನೀಡಿದ ಸಂವಿಧಾನ ಅತ್ಯಂತ ಶ್ರೇಷ್ಟವಾಗಿದೆ. ದಲಿತ ಸಮುದಾಯವರು ಆರ್ಥಿಕ, ಸಾಮಾಜಿಕ, ಧಾರ್ಮಿಕವಾಗಿ ಸಧೃಢರಾಗಬೇಕೆಂದು ಹಲವಾರು ಯೋಜನೆಗಳನ್ನು ರೂಪಿಸಿದ್ದರು ಎಂದರು.ಸಭೆ ಅಧ್ಯಕ್ಷತೆ ವಹಿಸಿದ್ದ ಡಿ.ಎಸ್.ಎಸ್.ಜಿಲ್ಲಾ ಸಂಚಾಲಕ ಡಿ.ರಾಮು ಮಾತನಾಡಿ, ನಮ್ಮ ಸಮುದಾಯದ ಜನರಿಗೆ ಹಕ್ಕುಪತ್ರ, ಜಾತಿ ಪ್ರಮಾಣ ಪತ್ರಗಳನ್ನು ನೀಡುವಂತೆ ಎಷ್ಟು ಬಾರಿ ಅರ್ಜಿಗಳು ನೀಡಿದರೂ ಸಿಗುತ್ತಿಲ್ಲ ಹಾಗೂ ನಮ್ಮ ಜನರಿಗೆ ಸರ್ಕಾರದ ಸವಲತ್ತುಗಳು ಸಿಗುತ್ತಿಲ್ಲ. ಆದ್ದರಿಂದ ಮುಂದಿನ ತಿಂಗಳಲ್ಲಿ ದೊಡ್ಡಮಟ್ಟದ ಪ್ರತಿಭಟನೆ ಮಾಡಲು ನಮ್ಮ ಸಂಘಟನೆ ತೀರ್ಮಾನಿಸಿದೆ ಎಂದರು.