ಅಂಬೇಡ್ಕರ್ ವೃತ್ತದಲ್ಲಿ ಡಾ.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನ
ದೇಶದಲ್ಲಿನ ಧಮನೀತರು, ಶೋಷಿತರು, ದಲಿತರ ಪರವಾಗಿ ಹಕ್ಕುಗಳನ್ನು ರೂಪಿಸಿದ ಡಾ.ಬಿ.ಆರ್. ಅಂಬೇಡ್ಕರ್ ಎಲ್ಲಾ ಜಾತಿ, ಧರ್ಮದವರನ್ನು ಸಮನಾಗಿ ಕಂಡಿದ್ದರು ಎಂದು ಕೊಪ್ಪ ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘ,ಸಂಸ್ಥೆಗಳ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿ ನಿರ್ವಾಣ ದಿನ ಕಾರ್ಯಕ್ರಮ ದಲ್ಲಿ ಮಾತನಾಡಿದರು. ವರ್ಣಾಶ್ರಮದಲ್ಲಿ ಮೇಲು, ಕೀಳು, ಅಸಮಾನತೆ, ದಬ್ಬಾಳಿಕೆ, ಮಹಿಳೆಯರ ಶೋಷಣೆ ನಡೆಯುತ್ತಿತ್ತು. ಇದನ್ನು ವಿರೋಧಿಸಿ ಎಲ್ಲರಿಗೂ ಸಮಾನ ಹಕ್ಕನ್ನು ಪ್ರತಿಪಾದಿಸಿದವರು ಡಾ.ಬಿ. ಆರ್. ಅಂಬೇಡ್ಕರ್. ಅಂಬೇಡ್ಕರ್ ದೇಶ ಕಂಡ ಮಹಾನ್ ವ್ಯಕ್ತಿಯಾಗಿದ್ದು ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಬೇಕಾಗಿದೆ ಎಂದರು.ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮಾತನಾಡಿ, ಅಂಬೇಡ್ಕರ್ ದೇಶದಲ್ಲಿ ಶೋಷಿತ ವರ್ಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು. ಭಾರತ ಅತ್ಯುತ್ತಮ ಗಣ ರಾಜ್ಯವಾಗಲು ಅಂಬೇಡ್ಕರ್ ರಚಿಸಿದ ಸಂವಿಧಾನ ಕಾರಣ. ಸಮ ಸಮಾಜ ನಿರ್ಮಾಣಕ್ಕಾಗಿಯೂ ಅವರು ಶ್ರಮಿಸಿದ್ದರು. ಇಂತಹ ವ್ಯಕ್ತಿಯ ಆದರ್ಶ, ಬದುಕಿನ ಬಗ್ಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದರು.