ಕನ್ನಡ ಪ್ರಭ ವಾರ್ತೆ ಮಳವಳ್ಳಿಸಾಮಾಜಿಕ ನ್ಯಾಯದ ಹೋರಾಟಕ್ಕೆ ನಾಂದಿ ಹಾಡಿದ ಬಸವಣ್ಣನವರ ದೂರದೃಷ್ಟಿ ಫಲದಿಂದಲೇ ಡಾ. ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದಿಂದ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.
ಸಾಮಾಜಿಕ ನ್ಯಾಯದ ಪರಿಕಲ್ಪನೆಯೊಂದಿಗೆ ಸಂವಿಧಾನದ ನಿಜ ಜಾರಿಯ ಜವಾಬ್ದಾರಿಯಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ಪೀಠಿಕೆ ಓದು ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು.
ಗಂಡು-ಹೆಣ್ಣು ಬೇಧವಿಲ್ಲದೇ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು, ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎನ್ನುವ ಸಂದೇಶ ಸಾರುವುದರ ಜೊತೆಗೆ ವಿಶ್ವವೇ ಮೆಚ್ಚುವಂತಹ ಆಡಳಿತವನ್ನು ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು. ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ, ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಎಲ್ಲಾ ಜನಾಂಗದವರಿಗೂ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು. ಬಸವಣ್ಣನವರ ಮಾದರಿ ಆಡಳಿತ ಮತ್ತು ಚಿಂತನೆಗಳು ಅಂಬೇಡ್ಕರ್ ಸಂವಿಧಾನ ಬರೆಯಲು ಸ್ಪೂರ್ತ್ತಿದಾಯಕವಾಗಿತ್ತು. ಇವರಿಬ್ಬರ ಚಿಂತನೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.