ಇಂದು ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Nov 11, 2025, 03:15 AM IST
ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರಧಾನ ಸಮಾರಂಭ  | Kannada Prabha

ಸಾರಾಂಶ

ನ.11 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಬೆಳಗಾವಿ ವತಿಯಿಂದ ನ.11 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಅಧ್ಯಕ್ಷೆ ವಿನಯಾ ಒಕ್ಕುಂದ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷವೂ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಒಂದೊಂದು ಕ್ಷೇತ್ರದಲ್ಲಿ ಗಣನೀಯ ಸಾಧನೆ ಹಾಗೂ ಅವರ ಹಿರಿತನ ಪರಿಗಣಿಸಿ ಪ್ರಶಸ್ತಿ ನೀಡುತ್ತಾ ಬಂದಿದೆ. ಕಾರಣಾಂತರಗಳಿಂದ 2023, 24ನೇ ಸಾಲಿನ ಪ್ರಶಸ್ತಿಗಳು ಬಾಕಿಯಿದ್ದು, ಈಗ 2025ನ್ನು ಸೇರಿಸಿ ನಾಡಿನ ಹಿರಿಯ ಹಾಗೂ ಯುವ ಸಾಹಿತಿಗಳಿಗೆ ಪ್ರಶಸ್ತಿ ನೀಡುತ್ತಿದ್ದೇವೆ ಎಂದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು, ಶಾಸಕ ಆಸೀಫ್ ಸೇಠ್, ಬಸವರಾಜ್ ಕಟ್ಟಿಮನಿ ಟ್ರಸ್ಟ್ ಅಧ್ಯಕ್ಷ ವೈ.ಬಿ.ಹಿಮ್ಮಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಹನುಮಂತ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ವೆಂಕಟಗಿರಿ ದಳವಾಯಿ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಅನುಸೂಯ ಕಾಂಬಳೆ ಆಶಯ ನುಡಿಗಳನ್ನಾಡಲಿದ್ದಾರೆ ಎಂದರು.

ಪ್ರಶಸ್ತಿ ಪುರಸ್ಕೃತರು:

ನಾಡಿನ ಹಿರಿಯ ಸಾಹಿತಿಗಳಾದ ಎಚ್.ಎಸ್.ಶಿವಪ್ರಕಾಶಗೆ 2023ನೇ ಸಾಲಿನ ಡಾ.ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ, ಡಾ.ಜಿ.ರಾಮಕೃಷ್ಣಗೆ 2024ರ ವೈಚಾರಿಕ ಮತ್ತು ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಬಿ.ಟಿ ಜಾಹ್ನವಿಗೆ 2025ರ ಸಾಲಿನ ಕಥಾ ಪ್ರಶಸ್ತಿ ಕೊಡಲಾಗುತ್ತಿದೆ. ಅದರಂತೆ ಯುವ ಸಾಹಿತಿಗಳಾದ ಕೆ.ಅಕ್ಷತಾ 2023, ವಿಲ್ಸನ್ ಕಟೇಲ್ 2024, ಅರಿಫ್‌ ರಾಜಾಗೆ 2025ನೇ ಸಾಲಿನ ಪ್ರಶಸ್ತಿ ಮತ್ತು ನಗದು ನೀಡಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಯುವಕಥೆ ಹಾಗೂ ಯುವ ಕಾವ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಹಾಗೂ ಟ್ರಸ್ಟ್ ಸಹ ಕಾರ್ಯದರ್ಶಿ ವಿದ್ಯಾವತಿ ಭಜಂತ್ರಿ, ಡಾ.ಎಚ್.ಬಿ. ಕೋಲಕಾರ, ಡಾ.ಗೀತಾಂಜಲಿ.ಎಂ ಉಪಸ್ಥಿತರಿದ್ದರು.

PREV

Recommended Stories

ಕೃಷಿ ಜಮೀನುಗಳ ಪೋಡಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ನಯನಾಡು ಗೆಳೆಯರ ಬಳಗ ಸೇವಾ ಟ್ರಸ್ಟ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ