ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ವೇಳೆ ಮಾತನಾಡಿ, ಕಾಯಕ ಸೇತು ಮತ್ತು ಸರ್ಜಿ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಉದ್ಯೋಗ ಸಂದರ್ಶನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಫೋನ್ ಮ್ಯಾನುಫ್ಯಾಕ್ಚರಿಂಗ್ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಪ್ರಸ್ತುತ ಖಾಲಿ ಇರುವ 2000ಕ್ಕೂ ಹೆಚ್ಚು ಹುದ್ದೆಗಳಿಗೆ ಕೇವಲ ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಮಹಿಳೆಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಆರ್ಥಿಕವಾಗಿ ಸ್ವತಂತ್ರರಾಗಬೇಕು, ಅವರಿಗೆ ಭದ್ರತೆ ಮತ್ತು ಸುರಕ್ಷಿತ ವಾತಾವರಣದಲ್ಲಿ ಕೆಲಸ ಮಾಡುವ ಅವಕಾಶ ಸಿಗಬೇಕು ಎಂಬ ಕಳಕಳಿಯಿಂದ ಈ ವಿಶೇಷ ಸಂದರ್ಶನವನ್ನು ಶಿವಮೊಗ್ಗದಲ್ಲೇ ಆಯೋಜಿಸಲಾಗಿದೆ ಎಂದು ಹೇಳಿದರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಯ ವತಿಯಿಂದಲೇ ಉಚಿತ ವಸತಿ ವ್ಯವಸ್ಥೆ, ಉಚಿತ ಊಟ , ಉಚಿತ ಕ್ಯಾಬ್ , ಪಿಎಫ್ ಮತ್ತು ಇಎಸ್ಐ, 24x7 ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. 10ನೇ ತರಗತಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಓದಿದ 18 ರಿಂದ 34 ವರ್ಷದೊಳಗಿನ ಯುವತಿಯರು /ಮಹಿಳೆಯರು ಈ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು.ಜಿಲ್ಲೆಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಡಾ.ಧನಂಜಯ ಸರ್ಜಿ ಅವರು ಶಿವಮೊಗ್ಗದ ತಮ್ಮ ಶಾಸಕರ ಕಚೇರಿಯಲ್ಲಿ ಕೇವಲ 7 ತಿಂಗಳ ಹಿಂದೆ ‘ಕಾಯಕ ಸೇತು’ ಜಾಬ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದ್ದರು. ಈ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ತಮ್ಮ ಅರ್ಹತೆಗೆ ತಕ್ಕ ಉದ್ಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇದೀಗ ಯುವತಿಯರಿಗೆ ಸುರಕ್ಷಿತ ಹಾಗೂ ಭವ್ಯ ಭವಿಷ್ಯ ರೂಪಿಸಲು ಈ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಮಾಜಿ ಸುಡಾ ಅಧ್ಯಕ್ಷ ನಾಗರಾಜ್, ಜ್ಞಾನೇಶ್ವರ್, ಇನ್ನೋವ್ ಕಂಪನಿಯ ಸಹಾಯಕ ವ್ಯವಸ್ಥಾಪಕ ದಯಾನಂದ್ ಸೇರಿ ಪ್ರಮುಖರು ಹಾಜರಿದ್ದರು.