ಡಾ. ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಸಮಾಜದ ಕನಸು ಕಂಡವರು

KannadaprabhaNewsNetwork |  
Published : Aug 02, 2026, 02:00 AM IST
ಹಾವೇರಿ ನಗರದ ಗಾಂಧಿ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಡಾ.ಮಹಾಂತ್ ಶಿವಯೋಗಿಗಳ ಜನ್ಮ ದಿನ-ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಮಾತನಾಡಿದರು. | Kannada Prabha

ಸಾರಾಂಶ

ಮಾದಕ ವಸ್ತುಗಳ ದುಶ್ಚಟಗಳನ್ನು ಮಹಾಂತ ಜೋಳಿಗೆಗೆ ಹಾಕುವಂತೆ ಮನವಿ ಮಾಡುವ ಮೂಲಕ, ವ್ಯಸನ ಮುಕ್ತ ಸಮಾಜದ ಕನಸುಕಂಡ ಅಪರೂಪದ ಮಹಾನ್ ವ್ಯಕ್ತಿ ಡಾ. ಮಹಾಂತ ಶಿವಯೋಗಿಗಳು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಅವರು ಹೇಳಿದರು.

ಹಾವೇರಿ: ಮಾದಕ ವಸ್ತುಗಳ ದುಶ್ಚಟಗಳನ್ನು ಮಹಾಂತ ಜೋಳಿಗೆಗೆ ಹಾಕುವಂತೆ ಮನವಿ ಮಾಡುವ ಮೂಲಕ, ವ್ಯಸನ ಮುಕ್ತ ಸಮಾಜದ ಕನಸುಕಂಡ ಅಪರೂಪದ ಮಹಾನ್ ವ್ಯಕ್ತಿ ಡಾ. ಮಹಾಂತ ಶಿವಯೋಗಿಗಳು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಅವರು ಹೇಳಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿವರ್ತನಾ ಮಹಿಳಾ ಸಂಘದ ಸಹಯೋಗದಲ್ಲಿ ಶ್ರೀ ಡಾ.ಮಹಾಂತ್ ಶಿವಯೋಗಿಗಳ ಜನ್ಮ ದಿನ-ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಣ, ದವಸಧಾನ್ಯಗಳನ್ನು ಜೋಳಿಗೆಗೆ ಹಾಕಿ ಎಂದು ಕೇಳುವ ಇತರರಿಗಿಂತ ಭಿನ್ನವಾದ ನಡೆಯಿಂದ ಧಾರ್ಮಿಕ, ಆಧ್ಯಾತ್ಮಿಕ ಶ್ರೇಯಸ್ಸಿನೊಂದಿಗೆ ಸ್ವಚ್ಛ ಸಮಾಜದ ಏಳಿಗೆಗಾಗಿ ಯುವಜನರಲ್ಲಿರುವ ದುಶ್ಚಟಗಳನ್ನು ಕೈಬಿಡುವಂತೆ ಜಾಗೃತಿಮೂಡಿಸಿ, ಜೋಳಿಗೆಯಲ್ಲಿ ದುಶ್ಚಟಗಳನ್ನು ದಾನಮಾಡಿ ಎಂದು ಮಹಾಂತ ಜೋಳಿಗೆ ಹಿಡಿದು ಮನೆ ಮನೆಗೆ ತೆರಳಿ ಆಂದೋಲನದ ರೀತಿಯಲ್ಲಿ ಸಾಮಾಜಿಕ ಬದಲಾವಣೆಗೆ ಶ್ರಮಿಸಿದರು ಎಂದು ಬಣ್ಣಿಸಿದರು.

ಪ್ರತಿನಿತ್ಯ ಮಾಧ್ಯಮಗಳಲ್ಲಿ ಅಪರಾಧ ಸುದ್ದಿಗಳನ್ನು ನೋಡುತ್ತೇವೆ. ಏನು ಮಾಡಬೇಕು, ಏನು ಮಾಡಬಾರದು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಬೇಕು. ವ್ಯಸನ ಮುಕ್ತ ಸಮಾಜ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ತಹಸೀಲ್ದಾರ್ ಶರಣಮ್ಮ ಕೆ., ಅವರು ಮಾತನಾಡಿ, ಯುವಪೀಳಿಗೆ ವ್ಯಸನಗಳಿಗೆ ದಾಸರಾಗುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಬೆಳೆಯುವ ಮಕ್ಕಳು ದುಶ್ಚಟಗಳಿಂದ ದೂರವಿರಬೇಕು. ವ್ಯಸನ ದುಸ್ಥಿತಿಗೆ ತಳ್ಳುತ್ತದೆ ಹಾಗೂ ದೈಹಿಕ ಆರೋಗ್ಯ ಹಾಳಾಗಿ ಕಾಯಿಲೆಗಳು ಬರುತ್ತವೆ. ನಮ್ಮ ಶರಣರು-ಸಂತರು ನಮಗೆ ಒಳ್ಳೆಯ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಯುವ ಸಮೂಹ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಹಾಗೂ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕರಾಗಿ ಭಾಗವಹಿಸಿದ ಬಳಿಗಾರ ಹಾಸ್ಪಿಟಲ್ ಮನೋವೈದ್ಯ ಡಾ. ವಿಜಯಕುಮಾರ ಬಳಿಗಾರ ಮಾತನಾಡಿ, ಡಾ. ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಚಿಂತನೆ ಮಾಡಿದವರು. 1985ರಲ್ಲಿ 25 ವರ್ಷ ಮೇಲ್ಪಟ್ಟವರು ಮದ್ಯಪಾನ ಮಾಡುತ್ತಿದ್ದರು. ಈಗ 17 ವರ್ಷದಿಂದಲೇ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ದೇಶದ ಶೇ.74ರಷ್ಟು ಕುಟುಂಬಗಳಲ್ಲಿ ಒಬ್ಬ ವ್ಯಸನಿಗಳಿದ್ದಾರೆ. ಇಂದು ಯುವಜನತೆ ಯಾವ ಕಡೆ ಸಾಗುತ್ತಿದೆ ಎಂಬುದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮದ್ಯಪಾನ, ಧೂಮಪಾನ ಜೊತೆ ಇಂದು ಮೊಬೈಲ್ ವ್ಯಸನದಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನ ಹಾಳುಮಾಡಿಕೊಳ್ಳುತ್ತಿರುವುದು ವಿಷಾದಕರ ಸಂಗತಿಯಾಗಿದೆ ಎಂದರು.

ಯುವ ಜನತೆ ದುಶ್ಚಟಗಳಿಗೆ ದಾಸರಾಗದೇ ಉತ್ತಮ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಮಾದಕ ವಸ್ತುಗಳ ಜಾಹೀರಾತುಗಳಿಗೆ ಮರುಳಾಗದೇ, ಏನು ಮಾಡಬೇಕು, ಏನು ಮಾಡಬಾರದು ಎಂದು ತಿಳಿದುಕೊಳ್ಳಬೇಕು. ಪಾಲಕರು ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ನೀಡಬೇಕು. ಸದೃಡ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಭಾರತಿ ಎಚ್. ಅವರು ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಬಿ.ಎಂ.ಬೇವಿನಮರದ, ಆರೋಗ್ಯ ಇಲಾಖೆಯ ಡಾ.ಸಂತೋಷ ದಡ್ಡಿ, ಸಾಹಿತಿ ಹನುಮಂತಗೌಡ ಗೊಲ್ಲರ ಇತರರು ಉಪಸ್ಥಿತರಿದ್ದರು.

ದೇವಕಿ ಎಸ್. ಉಂದ್ರಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ನಿರೂಪಿಸಿ. ವಂದಿಸಿದರು.

ಜಾಗೃತಿ ಜಾಥಾಕ್ಕೆ ಚಾಲನೆ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಆಯೋಜಿಸಲಾದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ ಅವರು ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಭಾರತಿ ಎಚ್., ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಬಿ.ಎಂ. ಬೇವಿನಮರದ, ಆರೋಗ್ಯ ಇಲಾಖೆಯ ಡಾ. ಸಂತೋಷ ದಡ್ಡಿ, ವಾರ್ತಾ ಇಲಾಖೆಯ ರಾಘವೇಂದ್ರ ಕುರಣೆ, ಇತರರು ಉಪಸ್ಥಿತರಿದ್ದರು. ಗಾಂಧಿ ಭವನದ ವರೆಗೆ ಜಾಗೃತಿ ಜಾಥಾ ಜರುಗಿತು.

ವ್ಯಸನಗಳಿಂದ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ, ಹಾಗಾಗಿ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಗುರಿ ಹೊಂದಬೇಕು. ಮಹಾನ್ ವ್ಯಕ್ತಿಗಳ ಜೀವನ ಆದರ್ಶಗಳನ್ನು ತಿಳಿದುಕೊಂಡು ಉತ್ತಮ ಮಾರ್ಗದಲ್ಲಿ ನಡೆಯಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶರಣ ಸಂಸ್ಕೃತಿಯೇ ಕನ್ನಡಿಗರ ಅಸ್ಮಿತೆ: ಡಾ. ನಿಂಗು ಸೊಲಗಿ
ಶರಣ ಸಾಹಿತ್ಯ ಬದುಕಿಗೆ ದಾರಿದೀಪ: ಶಿವಕುಮಾರ ಗೌಡ ಪಾಟೀಲ