ಡಾ. ರಾಜೇಂದ್ರ ಕುಮಾರ್‌ಗೆ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

KannadaprabhaNewsNetwork |  
Published : Nov 28, 2024, 12:34 AM IST
ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರಿಗೆ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಎಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ನೀಡಲಾದ ಪ್ರತಿಷ್ಠಿತ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ-2024’ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಬುಧವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಕರ್ನಾಟಕ ಸಂಭ್ರಮ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಗಣ್ಯರ ಉಪಸ್ಥಿತಿ: ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಗಣಕ ಯಂತ್ರ ವಿಜ್ಞಾನಿ, ಏಷ್ಯಾದ ಸಾಂಖ್ಯಿಕ ವಿಧಿವಿಜ್ಞಾನ ನಿರ್ದೇಶಕ ಡಾ.ಎಸ್.ಎಸ್. ಐಯ್ಯಂಗಾರ್, ತುಮಕೂರಿನ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಉಪಕುಲಪತಿ ಡಾ.ಕೆ.ಜಿ. ಲಿಂಗೇಗೌಡ, ಉದ್ಯಮಿ ಹಾಗೂ ಸಮಾಜ ಸೇವಕ ಡಾ.ಕೆ.ಜಿ. ಪುರುಷೋತ್ತಮ್, ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ. ಬಿ.ಆರ್. ಹಿರೇಮಠ್, ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ನಾಗರಾಜ್ ಕೆ.ಎಸ್, ದಿ ನ್ಯೂಸ್ ಪೇಪರ್ಸ್ ಎಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್, ಗೌರವ ಅಧ್ಯಕ್ಷ ಎ. ನಾರಾಯಣಮೂರ್ತಿ ಹಾಗೂ ಅಧ್ಯಕ್ಷ ಗಣೇಶ್ ಕಾಸರಗೋಡು ಮೊದಲಾದವರು ಇದ್ದರು.

ಸಮಾಜಮುಖಿ ಸೇವೆಗೆ ಸಂದ ಗೌರವ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿದ ಡಾ.ರಾಜೇಂದ್ರ ಕುಮಾರ್‌, ಸಹಕಾರಿ ರಂಗಕ್ಕೆ ಹೊಸ ಆಯಾಮ ತಂದುಕೊಟ್ಟವರು. ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆ ನೀಡಿದ ಶ್ರೇಯಸ್ಸು ಅವರದ್ದು. ಸಹಕಾರ, ಸಾಮಾಜಿಕ, ಬ್ಯಾಂಕಿಂಗ್, ಧಾರ್ಮಿಕ... ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು. ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನವೋದಯ ಸ್ವಸಹಾಯ ಸಂಘಗಳ ಮೂಲಕ ನೀಡಿ ಆರ್ಥಿಕ ಚೈತನ್ಯ ತುಂಬಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ