ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರಾಜ್ಯದಲ್ಲಿ ಗ್ರಾಮಾಭಿವೃದ್ಧಿಗೆ ನೀಡಿದ ಕೊಡುಗೆ ಪರಿಗಣಿಸಿ ಭಾರತೀಯ ಜೀವ ವಿಮಾ ನಿಗಮ ಪಾಲುದಾರ ಸಂಸ್ಥೆ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಜಂಟಿಯಾಗಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿಯನ್ನು ಮಂಗಳವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದೆ.
ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಬ್ದುಲ್ ಕಲಾಂ ಪ್ರತಿಷ್ಠಾನದ ಸಂಗ್ರಹಾಲಯದಿಂದ ಅಬ್ದುಲ್ ಕಲಾಂ ಬಳಸುತ್ತಿದ್ದ ಅಮೂಲ್ಯ ವಸ್ತುಗಳನ್ನು ಕೊಡುಗೆ ನೀಡುವುದಾಗಿ ತಿಳಿಸಿದರು. ಮರ್ಸಿಡಿಸ್ ಬೆಂಝ್ ಕಾರು ಕಂಪನಿಯ ಪ್ರಧಾನ ವ್ಯವಸ್ಥಾಪಕ ಸಂಜಯ್ ಕೊಚರ್ ಮಾತನಾಡಿ, ಕಾರ್ ಮ್ಯೂಸಿಯಂನಲ್ಲಿ ಅಪೂರ್ವ ಕಾರುಗಳ ಸಂಗ್ರಹ ನೋಡಿ ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ಮುಖ್ಯ ಅಂಚೆ ಅಧೀಕ್ಷಕ ರಮೇಶ್ ಪ್ರಭು ಅಂಚೆ ಚೀಟಿ ಬಿಡುಗಡೆಗೊಳಿಸಿದರು.ಭಾರತೀಯ ಜೀವ ವಿಮಾ ನಿಗಮದ ದಕ್ಷಿಣ ವಲಯದ ಹಿರಿಯ ವಲಯಾಧಿಕಾರಿ ಪುನಿತ್ ಕುಮಾರ್ ಮಾತನಾಡಿ, ಭಾರತೀಯ ಜೀವವಿಮಾ ನಿಗಮವು ಕಳೆದ ೧೭ ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಜನರ ಆರ್ಥಿಕ ಸ್ವಾವಲಂಬನೆಗಾಗಿ ಆರೋಗ್ಯ, ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಉತ್ತಮ ಸೇವೆ ನೀಡುತ್ತಿದೆ. ದೇಶದೆಲ್ಲೆಡೆ ೧೫ ಲಕ್ಷ ಬಿಮಾ ಸಖಿಯರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಸಂಬಳದ ಜೊತೆ ಕಮೀಶನ್ ಕೂಡಾ ನೀಡಲಾಗುತ್ತದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಜೀವವಿಮಾ ಕಂಂನಿಯಿಂದಾಗಿ ಸಾರ್ವಜನಿಕರು ಇಂದು ಜಾಗೃತರಾಗಿದ್ದು, ತಾವಾಗಿಯೆ ವಿಮೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇಮವನದ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಯೋಜನೆಯ ಟ್ರಸ್ಟಿಗಳಾದ ಉದಯ ಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್., ಪುತ್ತೂರು ಅಂಚೆ ಅಧೀಕ್ಷಕ ಕೆ. ರವೀಂದ್ರ ನಾಯಕ್ ಮತ್ತಿತರರಿದ್ದರು.ಎಲ್ಐಸಿಯ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್. ಭಟ್ ಸ್ವಾಗತಿಸಿದರು. ಭಾರತೀಯ ಜೀವ ವಿಮಾ ನಿಗಮ ಉಡುಪಿ ವಿಭಾಗದ ಮೈಕ್ರೋ ಇನ್ಶುರೆನ್ಸ್ ಮೆನೆಜರ್ ದಿನೇಶ್ ಪ್ರಭು ವಂದಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೆಜಸ್ ನಿರೂಪಿಸಿದರು.