ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಒತ್ತಾಯ
ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗಕ್ಕೆ ನೀರು ತಲುಪುವವರೆಗೂ ಕಾಯದೆ ಮೇಲ್ಭಾಗದ ವಿತರಣಾ ಕಾಲುವೆಗಳಿಗೆ ನೀರು ಹರಿಸಿ ರೈತರು ಸಸಿ ಮಡಿ ಹಾಕಿಕೊಳ್ಳಲು ಅನುಕೂಲ ಮಾಡಿಕೊಡಬೇಕೆಂದು ಮಾಜಿ ಶಾಸಕ ಬಸವರಾಜ್ ದಢೇಸ್ಗೂರು ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೇಸಿಗೆ ಬೆಳೆಗೆ ನೀರಿಲ್ಲದೆ ಭತ್ತದ ಕಣಜದ ರೈತರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಕೊಪ್ಪಳ-ರಾಯಚೂರು ಜಿಲ್ಲೆಯ ವಿತರಣಾ ಕಾಲುವೆಗಳಿಗೆ ಕೂಡಲೇ ನೀರು ಹರಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ನೀರಿನ ಒಳಹರಿವಿನ ಪ್ರಮಾಣ ನೋಡಿಕೊಂಡು ತುಂಗಭದ್ರಾ ಮಂಡಳಿ ಕಾಲುವೆಗಳಿಗೆ ನೀರು ಬಿಡಲು ಮುಂದಾಗಿದ್ದು ಸ್ವಾಗತಾರ್ಹ. ಆದರೆ ಎಡದಂಡೆ ಕಾಲುವೆಗೆ ಮುನಿರಾಬಾದಿನಿಂದ ಬಿಟ್ಟ ನೀರು ರಾಯಚೂರುವರೆಗೆ ತಲುಪುವ ತನಕ ಸುಮಾರು ೧೦ ದಿನಗಳಾಗುತ್ತದೆ. ಅಲ್ಲಿಯವರೆಗೂ ರೈತರನ್ನು ಕಾಯಲು ಬಿಟ್ಟು ಕೂಡಲೇ ಎಲ್ಲ ವಿತರಣಾ, ಉಪಕಾಲುವೆಗಳಿಗೆ ನೀರು ಹರಿಸಿದರೆ ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುತ್ತದೆ. ಭತ್ತದ ಕೃಷಿ ಚಟುವಟಿಕೆಗೆ ಜೀವಂತಿಕೆ ಬರುತ್ತದೆ. ನೀರು ಹರಿಸಿಕೊಂಡು ಸಸಿ ಮಡಿ ಹಾಕಿಕೊಂಡರೆ ಈ ಬಾರಿಯಾದರೂ ಸಕಾಲಕ್ಕೆ ಭತ್ತ ನಾಟಿ ಮಾಡಬಹುದು ಎನ್ನುವುದನ್ನು ನೀರಾವರಿ ಅಧಿಕಾರಿಗಳು ಗಮನ ಹರಿಸಿ ಯೋಚಿಸಬೇಕಾಗಿದೆ ಎಂದರು.