ಗದಗ: ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶುಕ್ರವಾರ (ಅ. 6) ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಬೆಳೆ ನಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಕೇಂದ್ರ ಬರ ಅಧ್ಯಯನ ತಂಡವು ಅ. 6ರಂದು ಬೆಳಗ್ಗೆ 9.45ಕ್ಕೆ ಲಕ್ಷ್ಮೇಶ್ವರ ತಾಲೂಕಿನ ಹುಲಗೇರಿ ಬಣ, 10ಕ್ಕೆ ಇಟ್ಟಿಗೇರಿ ಕೆರೆ, 10.35ಕ್ಕೆ ದೊಡ್ಡೂರ, 10.55ಕ್ಕೆ ಸೂರಣಗಿ, 11.15ಕ್ಕೆ ಚಿಕ್ಕಸವಣೂರ, 11.25ಕ್ಕೆ ಬೆಳ್ಳಟ್ಟಿ, 11.40ಕ್ಕೆ ವಡವಿ, ಮಧ್ಯಾಹ್ನ 12ಕ್ಕೆ ದೇವಿಹಾಳ, 12.10ಕ್ಕೆ ಛಬ್ಬಿ, 12.25ಕ್ಕೆ ಶೆಟ್ಟಿಕೇರಿ ಕ್ರಾಸ್, 12.45ಕ್ಕೆ ಮುಳಗುಂದ ಮೂಲಕ ಗದಗ ಆಗಮಿಸಲಿದೆ. ಆನಂತರ ಮಧ್ಯಾಹ್ನ 1.30ಕ್ಕೆ ಕೊಪ್ಪಳ ಜಿಲ್ಲೆಗೆ ತಂಡದ ಸದಸ್ಯರು ಪ್ರಯಾಣಿಸುವರು.ಜಿಲ್ಲೆಯ ಬರ ಪರಿಸ್ಥಿತಿಯನ್ನು ಸರಿಯಾಗಿ ವಿವರಿಸಿ-ಅಧಿಕಾರಿಗಳಿಗೆ ಡಿಸಿ ಸೂಚನೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸುವ ಹಿನ್ನೆಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರಿಗೆ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮನವರಿಕೆ ಆಗುವಂತೆ ಸಂಬಂಧಿತ ಇಲಾಖೆ ಅಧಿಕಾರಿಗಳು ಸರಿಯಾಗಿ ವಿವರಣೆ ನೀಡಬೇಕು. ಯಾವುದೇ ಕಾರಣಕ್ಕೂ ಬರ ಅಧ್ಯಯನ ತಂಡದ ಸದಸ್ಯರು ಬಂದು ಹೋಗುವವರೆಗೆ ಶಿಷ್ಟಾಚಾರ ವ್ಯವಸ್ಥೆಯಲ್ಲಿ ಅವ್ಯವಸ್ಥೆ ಆಗದಂತೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜೂನ್ನಿಂದ ಸೆಪ್ಟೆಂಬರ್ ವರೆಗೆ ನೈಋತ್ಯ ಮುಂಗಾರು ಮಳೆಯು ವಾಡಿಕೆ ಮಳೆ ೩೭೨ ಮೀ.ಮೀ. ಆಗಬೇಕಿತ್ತು. ಆದರೆ ವಾಡಿಕೆ ಮಳೆ ಆಗದೇ ಇರುವುದರಿಂದ ಬರಗಾಲ ಆವರಿಸಿದೆ. ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ ಶೇ. ೫೪ರಷ್ಟು ಹಾಗೂ ಅಗಸ್ಟ್ನಲ್ಲಿ ಶೇ. ೬೨ರಷ್ಟು ಮಳೆ ಕೊರತೆಯಾಗಿದ್ದು, ಬರಗಾಲ ಸಂಪೂರ್ಣವಾಗಿ ಆವರಿಸುವಂತಾಗಿದೆ. ಅಧಿಕಾರಿಗಳು ಕೇಂದ್ರ ಬರ ಅಧ್ಯಯನ ಅಧಿಕಾರಿಗಳಿಗೆ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ನಿಖರವಾದ ಅಂಕಿ-ಸಂಖ್ಯೆಗಳನ್ನು ದಾಖಲೆಗಳೊಂದಿಗೆ ವಸ್ತುಸ್ಥಿತಿಯ ಕುರಿತು ಮನವರಿಗೆ ಮಾಡಿಕೊಡಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿಪಂ ಮುಖ್ಯಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಾನಂದ ಗೌಡರ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಹುಲಗನ್ನವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ ಬಿದರಿ, ಆಹಾರ ಇಲಾಖೆ ಉಪನಿರ್ದೇಶಕ ಗಂಗಪ್ಪ ಎಂ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.