ಕನ್ನಡಪ್ರಭ ವಾರ್ತೆ ಬಂಟ್ವಾಳ
ಪೈಪ್ ಒಡೆದು ಪೋಲಾಗುತ್ತಿರುವುದರಿಂದ ಜನರಿಗೆ ಸರಿಯಾದ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಆದರೆ ಈ ವಿಚಾರವಾಗಿ, ಇಲಾಖೆ ಹಾಗೂ ಗುತ್ತಿಗೆದಾರರು ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂತು.
ಕಾಮಗಾರಿಯ ವೇಳೆ ಹಾಗೂ ಬಳಿಕ ನಡೆಯುವ ಸಮಸ್ಯೆಗಳಿಗೆ ಸೂಕ್ತವಾದ ರೀತಿಯಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಜವಬ್ದಾರಿ ನಮ್ಮದು ಎಂದು ಒಳಚರಂಡಿ ಇಲಾಖೆಯ ಎ.ಇ.ಇ. ಅಜಯ್ ಆರ್.ವಿ. ತಿಳಿಸಿದರು.2019ರ ಮೊದಲ ಯೋಜನೆಯಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ಜನವರಿ 31ರ ಒಳಗೆ ದೂರನ್ನು ನೀಡಿದರೆ ಸೂಕ್ತವಾದ ಕ್ರಮಕೈಗೊಳ್ಳಲು ಸಾಧ್ಯ. ಬಳಿಕ ಬಂದ ದೂರುಗಳನ್ನು ಸ್ವೀಕರಿಸಲು ಇಲಾಖೆಯಿಂದ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುರಸಭಾ ಸದಸ್ಯರ ವಾರ್ಡ್ ಗಳಲ್ಲಿರುವ ಸಮಸ್ಯೆಗಳನ್ನು ಪುರಸಭೆ ಮೂಲಕ ನಮ್ಮ ಇಲಾಖೆಗೆ ಕಳುಹಿಸಿಕೊಡಿ, ಎಲ್ಲವನ್ನು ಪರಿಶೀಲಿಸಿ ಹಂತಹಂತವಾಗಿ ಬಗೆಹರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಉಪಾಧ್ಯಕ್ಷೆ ಹಾಗೂ ಸದಸ್ಯೆ ಜೆಸಿಂತಾ ಡಿಸೋಜ ಮಾತನಾಡಿ, ಪೈಲ್ಲೈನ್ಗಳು ಹಾನಿಯಾಗಿರುವ ಕುರಿತು ಗಮನ ಸೆಳೆದರು. ಸದಸ್ಯೆ ಗಾಯತ್ರಿ ಪ್ರಕಾಶ್ ಅವರೂ ಈ ಕುರಿತು ದನಿಗೂಡಿಸಿದರು.
ರಸ್ತೆಯ ಮೇಲೆಯೇ ನೀರಿನ ಪೈಪ್: ದಿನದ 24 ಗಂಟೆ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವುದಾಗಿ ಹೇಳಿಕೊಂಡು ಈಗ ಒಂದು ಗಂಟೆಯೂ ನೀರು ಬರುತ್ತಿಲ್ಲ. ರಸ್ತೆಯ ಮೇಲೆಲ್ಲಾ ಪೈಪುಗಳು ಕಾಣಿಸಿಕೊಂಡಿದ್ದು, ಇಂಥ ಯೋಜನೆ ನಮಗೆ ಬೇಕಿತ್ತಾ ಎಂದು ಹಿರಿಯ ಸದಸ್ಯ ಎ. ಗೋವಿಂದ ಪ್ರಭು ಪ್ರಶ್ನಿಸಿದರು. ಉಪಾಧ್ಯಕ್ಷ ಮೊನೀಶ್ ಆಲಿ, ಸದಸ್ಯರಾದ ಹರಿಪ್ರಸಾದ್, ಝೀನತ್ ಫಿರೋಜ್, ಮೀನಾಕ್ಷಿ ಗೌಡ, ಇದ್ರೀಸ್ ಹಲವು ವಿಷಯಗಳ ಕುರಿತು ಗಮನ ಸೆಳೆದರು. ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಪುರಸಭೆ ಪರವಾಗಿ ಮಾತನಾಡಿದರು. ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಉಪಸ್ಥಿತರಿದ್ದರು.