ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಘುನಾಥಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮದ ನೀರನ್ನು ಖಾಸಗಿ ಲೇಔಟ್ಗೆ ಪೂರೈಸಲಾಗುತ್ತಿದೆ ಹಾಗೂ ಲೇಔಟ್ನ ಕೊಳಚೆ ನೀರು ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಈ ಕುರಿತು ಗ್ರಾಮಸ್ಥರು , ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಖಾಸಗಿ ಲೇಔಟ್ಗೆ ನೀರು ಪೂರೈಕೆಯನ್ನು ಗ್ರಾಮಸ್ಥರೇ ಸ್ಥಗಿತಗೊಳಿಸಿದ್ದರು.
ಕೊಳಚೆ ನೀರು ಕೆರೆಗೆ ಸೇರುತ್ತಿರುವುದರಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕವಿದೆ. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ . ಲೇಔಟ್ನ ಕೊಳಚೆ ನೀರಿನ ಟ್ಯಾಂಕ್ಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ, ಕೆರೆಗೆ ನೀರು ಸೇರುವುದನ್ನು ತಕ್ಷಣ ತಡೆಯಬೇಕು ಎಂದು ಆಗ್ರಹಿಸಿದ್ದರು.
ಈ ವೇಳೆ ಅಧಿಕಾರಿಗಳು ಮೂರು ದಿನಗಳೊಳಗೆ ಕೊಳಚೆ ನೀರು ಕೆರೆಗೆ ಹರಿಯದಂತೆ ಕ್ರಮ ಕೈಗೊಳ್ಳುವುದಾಗಿ ಹಾಗೂ ಸೂಕ್ತ ರೀತಿಯಲ್ಲಿ ಕೊಳಚೆ ನೀರಿನ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಇದೇ ವೇಳೆ ರಘುನಾಥಪುರ ಗ್ರಾಮಕ್ಕೆ ಕುಡಿಯಲು ಸಾಕಾಗದಷ್ಟು ನೀರು ಇರುವಾಗ ಖಾಸಗಿ ಲೇಔಟ್ಗಳಿಗೆ ನೀರು ಪೂರೈಸುತ್ತಿರುವುದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಸುತ್ತಮುತ್ತಲಿನ ಹಲವು ಖಾಸಗಿ ಲೇಔಟ್ಗಳಿಗೆ ಗ್ರಾಮದ ನೀರನ್ನು ಪೂರೈಸಿದರೆ ಸ್ಥಳೀಯರಿಗೆ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ. ಆದ್ದರಿಂದ ಗ್ರಾಮಸ್ಥರಿಗೆ ಮೊದಲ ಆದ್ಯತೆಯಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.
ಫೋಟೋ-