ಬರ ನಿರ್ವಹಣೆ: ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಿ: ಎಚ್.ಬಿ. ಹುಲಗಣ್ಣವರ

KannadaprabhaNewsNetwork |  
Published : Jul 17, 2026, 02:15 AM IST
ನರಗುಂದ ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ನಡೆದ 2026–27ನೇ ಸಾಲಿನ ಮೊದಲ ಸಾಮಾನ್ಯ ಸಭೆಯಲ್ಲಿ ಎಚ್.ಬಿ. ಹುಲಗಣ್ಣವರ ಮಾತನಾಡಿದರು. | Kannada Prabha

ಸಾರಾಂಶ

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಮಾತನಾಡಿ, ಮಳೆಗಾಲದಲ್ಲಿ ಡೆಂಘೀ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ನರಗುಂದ: ಮಳೆಯ ಕೊರತೆಯಿಂದ ತಾಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ತಾಪಂ ಆಡಳಿತಾಧಿಕಾರಿ ಎಚ್.ಬಿ. ಹುಲಗಣ್ಣವರ ಸೂಚಿಸಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ನಡೆದ 2026- 27ನೇ ಸಾಲಿನ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ವಿಮೆ ಮಾಡಿಸಲು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.

ಬೆಳೆಗಳಲ್ಲಿ ಕಂಡುಬರುತ್ತಿರುವ ಹಳದಿ ರೋಗ ನಿಯಂತ್ರಣಕ್ಕೆ ಅಗತ್ಯ ಲಸಿಕೆ ಸಿಂಪಡಣೆ ಹಾಗೂ ತಾಂತ್ರಿಕ ಮಾಹಿತಿ ರೈತರಿಗೆ ತಲುಪಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಮಾತನಾಡಿ, ಮಳೆಗಾಲದಲ್ಲಿ ಡೆಂಘೀ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಿಶೇಷ ಅಭಿಯಾನದ ಮೂಲಕ ಪುನಃ ಶಾಲೆಗೆ ದಾಖಲಿಸಬೇಕು. ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಕಾಪಾಡಲು ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ವಿಬಿ ಜಿ ರಾಮ್ ಜಿ ಯೋಜನೆಯಡಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದು, ವಿವಿಧ ಇಲಾಖೆಗಳು ಅಗತ್ಯ ಕಟ್ಟಡಗಳ ಪ್ರಸ್ತಾವನೆಗಳನ್ನು ತಾಪಂ ಹಾಗೂ ಸಂಬಂಧಿತ ಗ್ರಾಪಂಗಳಿಗೆ ಸಲ್ಲಿಸಿ, ಕ್ರಿಯಾಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದರು.

ತಾಲೂಕಿನ 13 ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಅಧಿಕಾರಿಗಳು, ಇತ್ತೀಚೆಗೆ ಸುರಿದ ಮಳೆಯಿಂದ ನವಿಲುತೀರ್ಥ ಜಲಾಶಯದಲ್ಲಿ ಹೆಚ್ಚುವರಿಯಾಗಿ 4 ಟಿಎಂಸಿ ನೀರು ಸಂಗ್ರಹವಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕವೂ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಂಡಿರುವುದರಿಂದ ಸದ್ಯ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.

ಆರೋಗ್ಯ, ಕೃಷಿ, ಪಂಚಾಯತ್ ರಾಜ್ ಎಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಾಲಾ ಶಿಕ್ಷಣ, ಅಕ್ಷರ ದಾಸೋಹ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ತೋಟಗಾರಿಕೆ, ಹೆಸ್ಕಾಂ, ಅರಣ್ಯ, ಲೋಕೋಪಯೋಗಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ 13 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ನಿರ್ವಹಣೆಗೆ ಪದವಿ ಮುಖ್ಯವಲ್ಲ, ಕೌಶಲ್ಯ ಬೇಕು
ಹೂಳು ತುಂಬಿದ ಚರಂಡಿ ದುರಸ್ತಿ ಮಾಡಿ: ಡಂಬಳ ಗ್ರಾಮಸ್ಥರ ಆಗ್ರಹ